ವಿಜಯಸಾಕ್ಷಿ ಸುದ್ದಿ, ಗದಗ: ಎಲ್ಲ ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ನಗರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರೈತರ ಎಲ್ಲಾ ರೀತಿಯ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು, ವಿವಿಧ ಕಡೆ ನಡೆಯುತ್ತಿರುವ ಖಾಸಗೀಕರಣ ಹಾಗೂ ಪಂಪ್ಸೆಟ್ ಮೀಟರೀಕರಣದ ಪ್ರಯತ್ನ ಕೂಡಲೇ ನಿಲ್ಲಿಸಬೇಕು, 60 ವರ್ಷ ದಾಟಿರುವ ಎಲ್ಲ ಕೃಷಿಕರಿಗೆ 5 ಸಾವಿರ ರೂ ಮಾಸಿಕ ಪಿಂಚಣಿ ನೀಡಬೇಕು, ರೈತ ವಿರೋಧಿ, ಕರಾಳ ಕೃಷಿ ಕಾಯ್ದೆಯ ತದ್ರೂಪವಾಗಿರುವ ಕೃಷಿ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ಧೋರಣೆ ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.
ಕರಾಳ ಕೃಷಿ ಕಾಯ್ದೆಗಳನ್ನು ಹಿಂಬಾಗಿಲ ಮೂಲಕ ಜಾರಿ ಮಾಡಲಾಗುತ್ತಿದೆ. ಇಚಿತಹ ಹಲವು ರೈತ ವಿರೋಧಿ ಧೋರಣೆಗಳು ಹಾಗೂ ರೈತರ ಆಗ್ರಹಗಳನ್ನು ನಿರ್ಲಕ್ಷ್ಯ ಮಾಡಿದ್ದರ ಫಲವಾಗಿ ರೈತ ನಾಯಕರ ಪ್ರಾಣ ಹೋಗುವಂತಹ ಪರಿಸ್ಥಿತಿ ಉಂಟಾಗಿದೆ. ಈ ತಕ್ಷಣವೇ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರಕಾರ ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಮುತ್ತನಗೌಡ ಚೌಡರಡ್ಡಿ, ಜಿಲ್ಲಾ ಗೌರವಾಧ್ಯಕ್ಷ ಮಾಹದೇವಗೌಡ ಪಾಟೀಲ, ರಾಮಪ್ಪ ಸವಡಿ, ಬಾಳಪ್ಪ ಮೊರಬದ, ಗೋವಿಂದಪ್ಪ ತಳವಾರ, ಶರಣಪ್ಪ ಕೊಪ್ಪದ, ಶರಣಪ್ಪ ಜೋರಗತ್ತಿ, ಅಲಾಸಾಬ್ ಕಣಗಿನಾಳ ಇದ್ದರು.