ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆಯ ಜೊತೆಗೆ ಕಠಿಣ ಪರಿಶ್ರಮದಿಂದ ಉತ್ತಮ ಸಾಧನೆ ಮಾಡಬಹುದಾಗಿದ್ದು, ವಿದ್ಯಾರ್ಥಿಗಳಲ್ಲಿ ಶಿಸ್ತು, ಧೈರ್ಯ ಹಾಗೂ ಸೇವಾ ಮನೋಭಾವನೆ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗುತ್ತದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಎಸ್ಎಸ್ಬಿಆರ್ ಅಂಬೇಡ್ಕರ್ ಶಾಲೆಯಲ್ಲಿ ಸೋಮವಾರ ಲಕ್ಮೇಶ್ವರ ಮತ್ತು ಶಿರಹಟ್ಟಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಘಟಕ ಹಾಗೂ ಎಸ್ಎಸ್ಬಿಆರ್ ಅಂಬೇಡ್ಕರ್ ಶಾಲೆಯ ಸಹಯೋಗದಲ್ಲಿ 2024-25ನೇ ಸಾಲಿನ ತಾಲೂಕು ಮಟ್ಟದ ಘಟಕಗಳ ನಾಯಕರ ತರಬೇತಿ ಹಾಗೂ ದ್ವಿತೀಯ ಸೋಪಾನ ಪರೀಕ್ಷೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಸಮಾಜಮುಖಿ ಕೆಲಸಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾಮಾಜಿಕ ಸೇವಾ ಮನೋಭಾವ ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳ ಕೈಯಲ್ಲಿ ಮೊಬೈಲ್ ಹಾವಳಿ ಹೆಚ್ಚಾಗಿದ್ದು, ಇದು ವಿದ್ಯಾರ್ಥಿ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಾನಸಿಕ ಆರೋಗ್ಯದ ಮೇಲೆಯೂ ಇದು ಕೆಟ್ಟ ಪರಿಣಾಮ ಬೀರುತ್ತದೆ. ಇದನ್ನು ಎಲ್ಲ ಪಾಲಕರು ಅರಿತುಕೊಳ್ಳಬೇಕು. ಅನಾವಶ್ಯಕವಾಗಿ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯನ್ನು ನಿಯಂತ್ರಿಸಿ, ಪುಸ್ತಕ ಓದುವ ಗೀಳು ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.
ಸ್ಕೌಟ್ಸ್, ಗೈಡ್ಸ್ನ ತಾಲೂಕಾ ಕಾರ್ಯದರ್ಶಿ ಕೆ.ಆರ್. ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯ ಕೆ. ರವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಲಾಪೂರ, ಪುರಸಭೆ ಅಧ್ಯಕ್ಷೆ ಯಲ್ಲಮ್ಮ ದುರ್ಗಣ್ಣವರ, ಸದಸ್ಯ ರಾಮು ಗಡದವರ, ಸ್ಕೌಟ್ಸ್, ಗೈಡ್ಸ್ ತಾಲೂಕಾ ನಿರ್ದೇಶಕರುಗಳಾದ ಡಿ.ಎಂ. ಪೂಜಾರ, ಈರಣ್ಣ ಅಕ್ಕೂರ, ಎಂ.ಎ. ಬುಕ್ಕಿಟ್ಟಗಾರ, ಜಿ.ಎ. ಹುಲಸೂರ, ಸಿಆರ್ಪಿ ಸತೀಶ ಬೋಮಲೆ, ಬಿ.ಎಸ್. ಬಂಕಾಪೂರ, ಡಿ.ಡಿ. ಲಮಾಣಿ ಹಾಗೂ ಶಿಕ್ಷಕರು, ವಿವಿಧ ಶಾಲೆಗಳ ಸ್ಕೌಟ್ಸ್-ಗೈಡ್ಸ್ ಮುಖ್ಯಸ್ಥರು ಉಪಸ್ಥಿತರಿದ್ದರು.
ಉಪಾಧ್ಯಕ್ಷ ಡಿ.ಡಿ. ಲಮಾಣಿ ನಿರೂಪಿಸಿದರು. ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳನ್ನು ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯಕ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ನ ಸಮಾಜಮುಖಿ ಕೆಲಸಗಳು ಪ್ರತಿಯೊಬ್ಬರಲ್ಲಿ ದೇಶಪ್ರೇಮ ಸಾರುವ ಯೋಜನೆಗಳನ್ನು ಹೊಂದಿದ್ದು, ಶಿಸ್ತು, ಮುಖಂಡತ್ವ ಗುಣ, ದೇಶಭಕ್ತಿ, ಆತ್ಮಸ್ಥೈರ್ಯ , ಧೈರ್ಯ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕರು ಮತ್ತು ಮಕ್ಕಳು ಮುಕ್ತವಾಗಿ ಭಾಗವಹಿಸಿ ಸ್ಕೌಟ್ಸ್ ಮತ್ತು ಗೈಡ್ಸ್ನ ಅನುಕೂಲ ಪಡೆಯುವದರೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿದರು.



