HomeGadag Newsಹೋರಾಟ ಹತ್ತಿಕ್ಕಲು ಪ್ರಯತ್ನಿಸಿದರೆ ಹೆದರುವುದಿಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಹೋರಾಟ ಹತ್ತಿಕ್ಕಲು ಪ್ರಯತ್ನಿಸಿದರೆ ಹೆದರುವುದಿಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪಂಚಮಸಾಲಿಗಳಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದ ಹೋರಾಟದಲ್ಲಿ ಪೊಲೀಸರಿಂದ ಲಾಠಿ ಏಟು ತಿಂದು ಗಾಯಗೊಂಡವರ ಮನೆಗೆ ಭೇಟಿ ನೀಡಿ `ಮೀಸಲಾತಿ ವೀರರು’ ಎಂದು ಬಿರುದು ನೀಡಲು ತಿರ್ಮಾನಿಸಲಾಗಿದ್ದು, ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ತೆರಳಿ `ಪ್ರತಿಜ್ಞಾ ಕ್ರಾಂತಿ’ ಹೆಸರಿನಲ್ಲಿ 8ನೇ ಹಂತದ ಹೋರಾಟ ಆರಂಭ ಮಾಡಿದ್ದೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಮಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಬ್ಬ ಪಂಚಮಸಾಲಿಗಳ ಮನೆಗೆ ತೆರಳಿ ರಾಜ್ಯ ಸರ್ಕಾರ ಮೀಸಲಾತಿ ನಿರಾಕರಣೆ ಮಾಡಿರುವುದನ್ನು ತಿಳಿಸುತ್ತೇವೆ. ಪ್ರತಿಜ್ಞಾ ಕ್ರಾಂತಿ ಹೆಸರಿನಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಸಂಚಾರವನ್ನು ಈಗಾಗಲೇ ಜನೇವರಿ 14ರಿಂದ ಬಳ್ಳಾರಿಯಿಂದ ಆರಂಭ ಮಾಡಲಾಗಿದೆ. ನಮ್ಮ ಹೋರಾಟ ಹತ್ತಿಕ್ಕಲು ಪ್ರಯತ್ನ ಮಾಡಿದರೆ ಹೆದರುವವರು ನಾವಲ್ಲ. ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಕಟುವಾಗಿ ಹೇಳಿದರು.

ಕಳೆದ ನಾಲ್ಕು ವರ್ಷದಿಂದ ಪಂಚಮಸಾಲಿಗಳು ಶಾಂತಿಯುತ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಆದರೆ, ಡಿಸೆಂಬರ್‌ನಲ್ಲಿ ನಡೆದ ಹೋರಾಟವನ್ನು ರಾಜ್ಯ ಸರ್ಕಾರ ಹತ್ತಿಕ್ಕುವ ಪ್ರಯತ್ನ ಮಾಡಿ ಉದ್ದೇಶಪೂರ್ವಕವಾಗಿ ಹೋರಾಟಗಾರರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದೆ. ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯನವರಿಗೆ ಆಗ್ರಹಿಸಿದರೂ ನಮ್ಮ ಮನವಿಗೆ ಅವರು ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿಗಳ ಧೋರಣೆಯಿಂದ ಸಮಾಜದ ಜನರು ಅಸಮಾಧಾನಗೊಂಡಿದ್ದಾರೆ ಎಂದು ಶ್ರೀಗಳು ಹೇಳಿದರು.

ಹೋರಾಟಗಾರರ ಮೇಲೆ ನಡೆದ ಹಲ್ಲೆಯ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಗಮನಕ್ಕೆ ತರುವ ಕೆಲಸವನ್ನು ಪಂಚಮಸಾಲಿ ಸಮಾಜದ ವಕೀಲರ ಸಂಘಟನೆ ಮಾಡುತ್ತಿದೆ. ಇನ್ನುಳಿದ ಮುಖಂಡರು ರಾಜ್ಯದ ಮನೆ-ಮನೆಗೆ ತೆರಳಿ ಮನವರಿಕೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ವಿರೋಧಿ ಎಂದು ಸಾಬಿತು ಮಾಡಿದೆ. ಮುಂದೆ ಬರುವ ಚುನಾವಣೆಯಲ್ಲಿ ಸಮಾಜದ ಜನರು ಎಚ್ಚೆತ್ತುಕೊಳ್ಳುತ್ತಾರೆ. ಪಂಚಮಸಾಲಿ ಸಮಾಜದ 12 ಶಾಸಕರಿದ್ದರೂ ಅಧಿವೇಶನದಲ್ಲಿ ಕೇವಲ ಇಬ್ಬರು ಮಾತ್ರ ಚರ್ಚಿಸಿದ್ದಾರೆ ಎಂದು ಕೆಲ ಶಾಸಕರ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಮಾಂತೇಶ ನಲವಡಿ, ಹಿರಿಯರಾದ ಬಸವರಾಜ ದೇಸಾಯಿ, ಜಿಲ್ಲಾ ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ, ಉಪಾಧ್ಯಕ್ಷ ಬಸವರಾಜ ಗಡ್ಡೆಪ್ಪನವರ, ಈರಮ್ಮ ತಾಳಿಕೋಟಿ, ಬಸವರಾಜ ಮನಗುಂಡಿ, ಸಂತೋಷ ಅಕ್ಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಎಸ್.ನಿಜಲಿಂಗಪ್ಪನವರಿಂದ ಬಸವರಾಜ ಬೊಮ್ಮಾಯಿವರೆಗೆ ಲಿಂಗಾಯತ ಸಮಾಜದ 8 ಜನರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು. ಯಾವುದೇ ಹೋರಾಟಗಾರರ ಮೇಲೆ ಹಲ್ಲೆ ಮಾಡುವ ಕೆಲಸ ಅವರು ಮಾಡಲಿಲ್ಲ. ಆದರೆ, ಸಿದ್ದರಾಮಯ್ಯನವರು ನಮ್ಮ ಸಮಾಜದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಸಿ ಕೈ ಸುಟ್ಟುಕೊಂಡಿದ್ದಾರೆ.

– ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ.

ಕೂಡಲಸಂಗಮ ಪಂಚಮಸಾಲಿ ಪೀಠ.

 

ಹಲ್ಲೆಗೊಳಗಾದವರ ಮನೆಗೆ ಭೇಟಿ

ಮೀಸಲಾತಿ ಹೋರಾಟದ ಸಮಯದಲ್ಲಿ ಗಾಯಗೊಂಡಿದ್ದ ಜಿಲ್ಲೆಯ ಬೂದಪ್ಪ ಅಂಗಡಿ, ಈರಣ್ಣ ಕೊಟಗಿಯವರ, ವಿರೂಪಾಕ್ಷಪ್ಪ ಹೊಸಮನಿ, ಸುರೇಶ ಮಲ್ಲೇಶಪ್ಪ ಕೊಂಡಿಕೊಪ್ಪ, ಮಲ್ಲಿಕಾರ್ಜುನ ಕಿರೆಸೂರ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಇತ್ತೀಚೆಗೆ ಅನ್ಯಕೋಮಿನವರಿಂದ ಹಲ್ಲೆಗೊಳಗಾಗಿದ್ದ ಸಮಾಜದ ಯುವಕ ಅನಿಲ ಮುಳ್ಳಾಳ ಮನೆಗೂ ಶ್ರೀಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!