ನವದೆಹಲಿ:- ಯಮುನಾ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಹರಿಯಾಣ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ದೆಹಲಿಗೆ ನೀರು ಸರಬರಾಜು ಮಾಡುವ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರ ವಿವಾದಾತ್ಮಕ ಹೇಳಿಕೆಗಾಗಿ ಹರಿಯಾಣ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದೆ. ಹರಿಯಾಣದ ಕಂದಾಯ ಸಚಿವ ವಿಪುಲ್ ಗೋಯಲ್ ಅವರು ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ಬೇಜವಾಬ್ದಾರಿತನದ ಹೇಳಿಕೆ ಎಂದು ಟೀಕಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗಳು ದಾರಿತಪ್ಪಿಸುವಂತಿದೆ ಎಂದು ಹರಿಯಾಣ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಹರಿಯಾಣ ಸರ್ಕಾರ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಫೆಬ್ರವರಿ 17ರಂದು ತನ್ನ ಮುಂದೆ ಹಾಜರಾಗುವಂತೆ ಹರಿಯಾಣ ನ್ಯಾಯಾಲಯ ನಿರ್ದೇಶಿಸಿದೆ.
ಘಟನೆ ಹಿನ್ನೆಲೆ:-
ಚುನಾವಣಾ ರ್ಯಾಲಿಯಲ್ಲಿ ಮಾತನಾಡುವಾಗ ಅರವಿಂದ್ ಕೇಜ್ರಿವಾಲ್ ಹರಿಯಾಣದ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹರಿಯಾಣ ಸರ್ಕಾರ ಯಮುನಾ ನದಿಗೆ ವಿಷ ಬೆರೆಸಿದೆ. ಈ ಮೂಲಕ ಸಾಮೂಹಿಕ ನರಮೇಧಕ್ಕೆ ಮುಂದಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು.



