ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಬುಧವಾರ ಶಿರಹಟ್ಟಿ ತಾಲೂಕಿನ ಚೌಢಾಳ ಗ್ರಾಮದಲ್ಲಿ 22ಕ್ಕೂ ಹೆಚ್ಚು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ಮೇವು ಸುಟ್ಟು ಬೂದಿಯಾಗಿದ್ದು, ಘಟನಾ ಸ್ಥಳಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಮತ್ತು ತಹಸೀಲ್ದಾರ ಅನಿಲ ಬಡಿಗೇರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಸತತ ಬರಗಾಲದಿಂದ ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದು, ಜಾನುವಾರುಗಳ ಪೋಷಣೆಗೆ ಸಂಗ್ರಹಿಸಿ ಇಡಲಾಗಿದ್ದ ಮೇವಿನ ಬಣವೆಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ರೈತರಿಗೆ ಅಪಾರ ಹಾನಿಯಾಗಿದೆ. ಈ ಬಗ್ಗೆ ಸೂಕ್ತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ ಮತ್ತು ಕೃಷಿ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.



