ನವದೆಹಲಿ: ಐತಿಹಾಸಿಕ ರಾಮಲೀಲಾ ಮೈದಾನದಲ್ಲಿಂದು ನಡೆದ ಬೃಹತ್ ಸಮಾರಂಭದಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅವರೊಂದಿಗೆ ಆರು ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇನ್ನೂ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಇತರ ಕೇಂದ್ರ ಸಚಿವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಿ.ಕೆ ಸಕ್ಸೆನಾ ಪ್ರಮಾಣ ವಚನ ಬೋಧಿಸಿದರು.
ಇದೇ ವೇಳೆ ಸಚಿವರಾಗಿ ಪರ್ವೇಶ್ ಸಾಹಿಬ್ ಸಿಂಗ್, ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದರ್ ಇಂದ್ರಜ್ ಸಿಂಗ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು, ಚಂದ್ರಬಾಬು ನಾಯ್ಡು ಸೇರಿದಂತೆ ಎನ್ಡಿಎ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಮಾರಂಭಕ್ಕೂ ಮುನ್ನ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲಾಯಿತು.