ಉತ್ತರಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳೂ ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಈಗಾಗಲೇ ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಇದೀಗ ಮಹಾಕುಂಭಾಮೇಳಕ್ಕೆ ಕೆಲವೇ ದಿನಗಳು ಭಾಕಿ ಇದ್ದು ಈ ಮಧ್ಯೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ತ್ರಿವೇಣಿ ಸಂಗಮದಲ್ಲಿ ನಡೆದ ಪವಿತ್ರ ಆಚರಣೆಯಲ್ಲಿ ಭಾಗಿಯಾಗಿದ್ದರು.
ತ್ರಿವೇಣಿ ಸಂಗಮದಲ್ಲಿ ಪವಿತ್ರಾ ಸ್ನಾನ ಮಾಡಿದ ಅಕ್ಷಯ್ ಕುಮಾರ್ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಇಷ್ಟು ಉತ್ತಮ ವ್ಯವಸ್ಥೆಗಳನ್ನು ಮಾಡಿದ್ದಕ್ಕಾಗಿ ನಾನು ಸಿಎಂ ಯೋಗಿಜಿ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಸೌಲಭ್ಯಗಳು ಅತ್ಯುತ್ತಮವಾಗಿವೆ ಮತ್ತು ಎಲ್ಲವನ್ನೂ ತುಂಬಾ ಚೆನ್ನಾಗಿ ನಿರ್ವಹಿಸಲಾಗಿದೆ” ಎಂದಿದ್ದಾರೆ.
ಇದೇ ವೇಳೆ ತಮ್ಮ ಹಿಂದಿನ ಅನುಭವ ನೆನಪಿಸಿಕೊಂಡ ಅಕ್ಕಿ, “ಹಿಂದೆ ಕುಂಭ ನಡೆದಾಗ ಜನರು ತಮ್ಮದೇ ಆದ ವಸ್ತುಗಳನ್ನು ತರುತ್ತಿದ್ದರು ಎಂಬುದಿನ್ನೂ ನನಗೆ ನೆನಪಿದೆ. ಆದ್ರೀಗ ಅಂಬಾನಿ, ಅದಾನಿ ಮತ್ತು ಪ್ರಸಿದ್ಧ ಕಲಾವಿದರಂತಹ ಅನೇಕ ಪ್ರಭಾವಿ ವ್ಯಕ್ತಿಗಳು ಬರುತ್ತಿದ್ದಾರೆ. ವ್ಯವಸ್ಥೆಗಳು ಎಷ್ಟು ಚೆನ್ನಾಗಿವೆ ಎಂಬುದನ್ನು ಇದು ತೋರಿಸುತ್ತದೆ” ಎಂದರು.
“ಇಲ್ಲಿ ಎಲ್ಲರನ್ನೂ ಉತ್ತಮವಾಗಿ ನೋಡಿಕೊಳ್ಳುತ್ತಿರುವುದಕ್ಕಾಗಿ ಎಲ್ಲಾ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅವರು ಎಲ್ಲಾ ಭಕ್ತರ ಸುರಕ್ಷತೆ ಮತ್ತು ಸೌಕರ್ಯವನ್ನು ನೋಡಿಕೊಂಡಿದ್ದಾರೆ” ಎಂದು ತಿಳಿಸಿದರು.