ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 49.3 ಓವರ್ ಗಳಲ್ಲಿ 264 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ನಾಯಕ ಸ್ಟೀವ್ ಸ್ಮಿತ್ 73 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾಗೆ ನೆರವಾದರು. ಬಳಿಕ ಟ್ರಾವಿಸ್ ಹೆಡ್ 33 ಎಸೆತಗಳಲ್ಲಿ 39 ರನ್ ಗಳಿಸಿ ಔಟ್ ಆದರು.
ಅಲೆಕ್ಸ್ ಕೇರಿ 57 ಎಸೆತಗಳಲ್ಲಿ 61 ರನ್ ಗಳಿಸಿ ಆಸ್ಟ್ರೇಲಿಯಾ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು. ಮಾರ್ನಸ್ ಲ್ಯಾಬುಶಾನೆ 29 ರನ್, ಡ್ವಾರಿಶಿಯಸ್ 19 ರನ್ ಗಳಿಸಿದರು. ಮೊಹಮ್ಮದ್ ಶಮಿ 3 ವಿಕೆಟ್ ಪಡೆದು ಮಿಂಚಿದರೆ, ವರುಣ್ ಚಕ್ರವರ್ತಿ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಪಡೆದರು.
265 ರನ್ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಶುಭಮನ್ ಗಿಲ್ 8 ರನ್ ಗಳಿಸಿ ಔಟಾದರು. ರೋಹಿತ್ ಶರ್ಮಾ 29 ಎಸೆತಗಳಲ್ಲಿ 28 ರನ್ ಗಳಿಸಿದರು. 43 ರನ್ ಗಳಿಸುವಷ್ಟರಲ್ಲಿ ಭಾರತ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು. ಮೂರನೇ ವಿಕೆಟ್ಗೆ ಈ ಜೋಡಿ 91 ರನ್ಗಳ ಜೊತೆಯಾಟ ಆಡಿದರು. ಶ್ರೇಯಸ್ ಅಯ್ಯರ್ 62 ಎಸೆತಗಳಲ್ಲಿ 45 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಗಳಿಸಿ ಔಟಾದರು. ಶತಕ ಗಳಿಸುವ ಅವಕಾಶವಿದ್ದರೂ ಝಂಪಾ ಬೌಲಿಂಗ್ನಲ್ಲಿ ಬೌಂಡರಿ ಗಳಿಸಲು ಹೋಗಿ ಕ್ಯಾಚ್ ನೀಡಿ ಔಟಾಗಿದ್ದು ನಿರಾಸೆ ಮೂಡಿಸಿತು.
ಅಕ್ಷರ್ ಪಟೇಲ್ 30 ಎಸೆತಗಳಲ್ಲಿ 27 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 24 ಎಸೆತಗಳಲ್ಲಿ ಮೂರು ಭರ್ಜರಿ ಸಿಕ್ಸರ್ ಸಹಿತ 28 ರನ್ ಗಳಿಸಿದರು. ಕೆಎಲ್ ರಾಹುಲ್ 34 ಎಸೆತಗಳಲ್ಲಿ ಅಜೇಯ 42 ರನ್ ಗಳಿಸಿದರು. ರವೀಂದ್ರ ಜಡೇಜಾ 2 ರನ್ ಗಳಿಸಿದರು.
ಇನ್ನೂ ಮಾರ್ಚ್ 9ರಂದು ದುಬೈನಲ್ಲೇ ಫೈನಲ್ ಪಂದ್ಯ ನಡೆಯಲಿದೆ.



