ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಮನೆ ಕೊಟ್ಟಿರೋದು ಸಾಬೀತು ಮಾಡಿದ್ರೆ ನಾನು ರಾಜೀನಾಮೆ ಕೊಡ್ತೀನಿ ಎಂದು ಬಿಜೆಪಿ ಸದಸ್ಯರಿಗೆ ವಸತಿ ಸಚಿವ ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸರ್ಕಾರ ವಸತಿ ಯೋಜನೆ ಅಡಿ ಮನೆ ಸರಿಯಾಗಿ ನಿರ್ಮಾಣ ಮಾಡುತ್ತಿಲ್ಲ ಎಂದು ಆರೋಪ ಮಾಡಿದ್ದರು.
ಈ ವೇಳೆ ಮಾತನಾಡಿದ ಸಚಿವರು, ಇದರಲ್ಲಿ ರಾಜಕೀಯ ಮಾಡಬೇಡಿ. ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ಕೊಟ್ಟಿಲ್ಲ. ಮನೆ ಕೊಟ್ಟಿರೋದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಬಿಜೆಪಿ ಸದಸ್ಯರಿಗೆ ಎರಡು ಬಾರಿ ಸವಾಲ್ ಹಾಕಿದ್ದಾರೆ.
ಇನ್ನೂ 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ(ಗ್ರಾಮೀಣ) ರಾಜ್ಯಕ್ಕೆ 7.03 ಲಕ್ಷ ಮನೆ ಗುರಿ ಹಂಚಿಕೆ ಮಾಡಲಾಗಿದೆ. ಈವರೆಗೆ 1.17 ಲಕ್ಷ ಫಲಾನುಭವಿಗಳನ್ನು ಆಯ್ಕೆ ಮಾಡಿ ಮಂಜೂರು ಮಾಡಲಾಗಿದೆ. ಬಾಕಿ ಮನೆಗಳ ಹಂಚಿಕೆಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದರು.