ಬೆಂಗಳೂರು:- ಹನಿ ಟ್ರ್ಯಾಪ್ ಕೇಸ್ ನಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಚಿವರು, ಶಾಸಕರ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ, ಪ್ರಕರಣದಲ್ಲಿ ಯಾರೇ ಆಗಿದ್ದರೂ ತೊಂದರೆಗೆ ಒಳಗಾಗಿದ್ದರೆ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದು ಸಿಎಂ ಹೇಳಿದರು.
‘‘ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು’’ ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.
ಸಚಿವರ, ಶಾಸಕರ ಹನಿಟ್ರ್ಯಾಪ್ ಯತ್ನ ಆರೋಪ ಸದ್ಯ ಕರ್ನಾಟಕ ವಿಧಾನಸಭೆಯಲ್ಲಿ ಹಾಗೂ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಸಚಿವ ಕೆಎನ್ ರಾಜಣ್ಣ ಸೇರಿದಂತೆ ಅನೇಕ ಸಚಿವರ, ಶಾಸಕರ ಹನಿಟ್ರ್ಯಾಪ್ಗೆ ಯತ್ನಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ವಿಚಾರವಾಗಿ ಸದನದಲ್ಲಿ ಪ್ರತಿಪಕ್ಷ ನಾಯಕರೂ ಸಹ ರಾಜಣ್ಣ ಬೆಂಬಲಕ್ಕೆ ನಿಂತಿದ್ದಲ್ಲದೆ ತನಿಖೆಗೆ ಆಗ್ರಹಿಸಿದ್ದಾರೆ.