ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿಯ ಕನ್ನಡ ವಿರೋಧಿ ಸಂಘಟನೆಗಳ ಪುಂಡಾಟಿಕೆಯನ್ನು ವಿರೋಧಿಸಿ ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್ ನಿಮಿತ್ತತ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ್ರ ಬಣ)ಗದಗ ಜಿಲ್ಲಾ ಘಟಕದಿಂದ ನಗರದಲ್ಲಿ ಬೈಕ್ ರ್ಯಾಲಿ ನಡೆಸಿ, ಘೋಷಣೆ ಕೂಗುತ್ತ, ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಕೈಗೊಂಡರು.
ಈ ಸಂದರ್ಭದಲ್ಲಿ ಕರವೇ ಗದಗ ಜಿಲ್ಲಾಧ್ಯಕ್ಷ ಮಂಜುನಾಥ ಪಿ.ಪರ್ವತಗೌಡ್ರ ಮಾತನಾಡಿ, ಎಮ್.ಇ.ಎಸ್ ಪುಂಡರಿಂದ ಬೆಳಗಾವಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿರ್ವಹಕನ ಮೇಲೆ ನಡೆದ ದೌರ್ಜನ್ಯ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ನಮ್ಮ ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ನಡೆಸಿದ ಗೂಂಡಾ ವರ್ತನೆಯನ್ನು ಸಹಿಸಲಾಗದು. ಪದೇ ಪದೇ ಕನ್ನಡಿಗರ ಮೇಲೆ ಆಗುತ್ತಿರುವ ದೌರ್ಜನ್ಯ, ಅನ್ಯಾಯವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಎಮ್.ಇ.ಎಸ್ ಮೇಲೆ ನಿಷೇಧ ಹೇರಬೇಕು ಎಂದು ಆಗ್ರಹಿಸಿದರು.
ರೈಲ್ವೆ ಇಲಾಖೆ, ಬ್ಯಾಂಕುಗಳು ಸೇರಿದಂತೆ ಕೇಂದ್ರ ಸರಕಾರದ ಇಲಾಖೆಗಳಲ್ಲಿ ಕನ್ನಡಿಗರ ಮೇಲೆ ನಿರಂತರವಾಗಿ ಆಗುತ್ತಿರುವ ಮಲತಾಯಿ ಧೋರಣೆಯನ್ನು ತೀವ್ರವಾಗಿ ಖಂಡಿಸುವದರೊಂದಿಗೆ ರಾಜ್ಯ ಸರಕಾರ ಇಂತಹ ನಾಡದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಪ್ರದಾನ ಕಾರ್ಯದರ್ಶಿ ಬಸವರಾಜ ಮುಳ್ಳಾಳ, ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ, ಜಿಲ್ಲಾ ಸಂಚಾಲಕರಾದ ಪರಶುರಾಮ ಬನ್ನೂರ, ಸಂಜೀವಗೌಡ ಬೆನಹಾಳ, ಮುತ್ತು ಬಿಳೆಯಲಿ, ಶರಣಪ್ಪ ಪೂಜಾರ, ಶರಣಪ್ಪ ಮಣ್ಣೂರ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.