ವಿಜಯಸಾಕ್ಷಿ ಸುದ್ದಿ, ಗದಗ: ಬೀದಿ ವ್ಯಾಪಾರಿಗಳ ಕಾಯ್ದೆ ಪಾಲಿಸದ ಗದಗ ಜಿಲ್ಲೆಯ 9 ಸ್ಥಳೀಯ ಸಂಸ್ಥೆಗಳ ಹಾಗೂ ಗದಗ-ಬೆಟಗೇರಿನಗರಸಭೆ ಪೌರಾಯುಕ್ತರು, ಪುರಸಭೆ, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು, ಸಿಇಓ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಮುಖ್ಯ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾರ್ಚ್ 25ರಂದು ಶವಯಾತ್ರೆ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ಬೀದಿ ಬದಿ ವ್ಯಾಪಾರಸ್ಥರ ಸಂಘದ ರಾಜ್ಯ ಉಪಾಧ್ಯಕ್ಷ ಬಾಷಾಸಾಬ ಮಲ್ಲಸಮುದ್ರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗದಗ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ 9 ಸ್ಥಳೀಯ ಸಂಸ್ಥೆಗಳ (ಟಿ.ವಿ.ಸಿ) ಪಟ್ಟಣ ಮಾರಾಟ ಸಮಿತಿಯ ಅಧ್ಯಕ್ಷರುಗಳಾದ ಪೌರಾಯುಕ್ತರು ಅಥವಾ ಮುಖ್ಯಾಧಿಕಾರಿಗಳು, ಕಾರ್ಯದರ್ಶಿಗಳಾದ ಅಂ.ಔ ಗಳು ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಸರ್ಕಾರದ ಆದೇಶ ಉಲ್ಲಂಘಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ಬೀದಿ ವ್ಯಾಪಾರಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳಾದ ಗಜೇಂದ್ರಗಡ, ರೋಣ, ನರೆಗಲ್, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ, ಮುಳಗುಂದ ಹಾಗೂ ನರಗುಂದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಕೌಶಲ್ಯಾಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.