ಬೆಂಗಳೂರು:- ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಏಪ್ರಿಲ್ 1 ರಿಂದ ಟೋಲ್ ಸುಂಕ ಏರಿಕೆ ಆಗಲಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ ಹೆಚ್ಚಳಕ್ಕೆ ಎನ್ಎಚ್ಎಐ ಮುಂದಾಗಿದೆ.
ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ 5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ ಎಂದು ಎನ್ಎಚ್ಎಐ ಯ ಬೆಂಗಳೂರಿನ ಯೋಜನಾ ನಿರ್ದೇಶಕ ಕೆಬಿ ಜಯಕುಮಾರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಸುಮಾರು 66 ಟೋಲ್ ಪ್ಲಾಜಾಗಳಿವೆ. ಟೋಲ್ ಸುಂಕ ಹೆಚ್ಚಾಗುವ ಟೋಲ್ ಪ್ಲಾಜಾಗಳಲ್ಲಿ ಕಣಿಮಿಣಿಕೆ ಮತ್ತು ಶೇಷಗಿರಿಹಳ್ಳಿ (ಬೆಂಗಳೂರು-ಮೈಸೂರು), ನಂಗ್ಲಿ (ಬೆಂಗಳೂರು-ತಿರುಪತಿ), ಬಾಗೇಪಲ್ಲಿ (ಬೆಂಗಳೂರು-ಹೈದರಾಬಾದ್), ಸಾದಹಳ್ಳಿ (ಬೆಂಗಳೂರು ವಿಮಾನ ನಿಲ್ದಾಣ ರಸ್ತೆ), ಮತ್ತು ಹುಲಿಕುಂಟೆ ಮತ್ತು ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ) ಟೋಲ್ ಪ್ಲಾಜಾಗಳು ಸೇರಿವೆ.