ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ನೀಗಲಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡೆಗಳು ನಮ್ಮ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕ್ರೀಡೆಯಿಂದ ಶಿಸ್ತು, ಸಮಯ ಪ್ರಜ್ಞೆ, ಕ್ರೀಡಾ ಮನೋಭಾವ, ಪ್ರಾಮಾಣಿಕತೆ ಇವೆಲ್ಲವನ್ನೂ ರೂಢಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳ ಪಾಲಿಗೆ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಅಭಿಪ್ರಾಯಪಟ್ಟರು.

Advertisement

ಅವರು ಗದಗ ನಗರದ ದಿ. ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ 2024-25ನೇ ಸಾಲಿನ ಗದಗ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಮತ್ತು ಅಧಿಕಾರಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಾಲಾ-ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯಿಂದ ಕ್ರೀಡಾಪಟುಗಳು ಕ್ರೀಡೆಯಲ್ಲಿ ಹಿಂದುಳಿಯಲು ಕಾರಣವಾಗಿದೆ. ತಕ್ಷಣ ಸರ್ಕಾರ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕೆಂದು ಎಸ್.ವಿ. ಸಂಕನೂರ ಒತ್ತಾಯಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ, ದೈಹಿಕ ಶಿಕ್ಷಕರಿಗೆ ಇದೇ ಮೊದಲ ಬಾರಿಗೆ ಕ್ರೀಡಾಕೂಟ ಆಯೋಜನೆ ಮಾಡಿದೆ. ನಿತ್ಯದ ಒತ್ತಡದ ಬದುಕಿಗೆ ಕ್ರೀಡೆ ಸಹಕಾರಿ. ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡೆಗಳಲ್ಲಿ ಭಾಗವಹಿಸುವದು ಮುಖ್ಯವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಚಿ, ಡೈಟ್ ಪ್ರಾಚಾರ್ಯ ಜಿ.ಎಲ್. ಬಾರಟಕ್ಕೆ, ಗ್ರಾಮೀಣ ಬಿಇಓ ವ್ಹಿ.ವ್ಹಿ. ನಡುವಿನಮನಿ, ಕ.ರಾ.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವ್ಹಿ.ಎಮ್. ಹಿರೇಮಠ, ಕ.ರಾ.ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಎಫ್. ಪೂಜಾರ, ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾಧಿಕಾರಿ ಬಸವರಾಜ ಬಳ್ಳಾರಿ, ರವಿರಾಜ ಪವಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕ ಶರಣು ಗೋಗೇರಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎಂ.ಎಂ. ಹವಳದ, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎಂ.ಎಂ ಕಲಹಾಳ, ತಾಲೂಕಿನ ದೈಹಿಕ ಶಿಕ್ಷಣ ಅಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಎಂ.ಎಸ್. ಕುಚಬಾಳ ನಿರೂಪಿಸಿದರು. ಪಿ.ಕೆ. ಅವರಡ್ಡಿ ವಂದಿಸಿದರು.

ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಎಲ್.ಗುಂಜಿಕರ್ ಮಾತನಾಡಿ, ನಮ್ಮ ವೃತ್ತಿ ಜೀವನದಲ್ಲಿ ಒತ್ತಡದ ಬದುಕಿಗೆ ಕ್ರೀಡೆ ಸಹಕಾರಿಯಾಗಿದೆ. ಇದೇ ಮೊದಲ ಬಾರಿಗೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಈ ಹಿಂದೆ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಕೊನೆಗೂ ಜಿಲ್ಲಾಧಿಕಾರಿಗಳ ಸಹಕಾರದಿಂದ ಅವರ ಆಸೆ ಕೈಗೂಡಿದ್ದು ಸಂತಸ ತಂದಿದೆ ಎಂದರು.


Spread the love

LEAVE A REPLY

Please enter your comment!
Please enter your name here