ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2025-26ನೇ ಸಾಲಿನ ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಭೇಟಿ ನೀಡಿ ಕಾಮಗಾರಿಗಳ ಗುಣಮಟ್ಟ, ಅಳತೆ, ಯೋಜನೆಯ ಉದ್ದೇಶಗಳ ಕುರಿತು ಕೂಲಿಕಾರರೊಂದಿಗೆ ಸಮಾಲೋಚನೆ ನಡೆಸಿ, ಕಾಮಗಾರಿ ಕಡತ, ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ ಹಾಜರಾತಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಗ್ರಾ.ಪಂ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಯಕ ಬಂಧುಗಳಿಗೆ ಹಾಗೂ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಒಂದು ಆರ್ಥಿಕ ವರ್ಷದಲ್ಲಿ ಪ್ರತಿ ಜಾಬ್ ಕಾರ್ಡ್ಗೆ 100 ದಿನ ಅಕುಶಲ ಕೂಲಿ ಕೆಲಸ ನೀಡಲಾಗುವುದು. ಕೂಲಿಕಾರರು ನಿರಂತರವಾಗಿ ಕೆಲಸ ಮಾಡಲು ಈಗಾಗಲೇ ನರೇಗಾ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೊದನೆ ನೀಡಿದ್ದು, ಒಂದು ಕುಟುಂಬಕ್ಕೆ 100 ದಿನ ಕೂಲಿ ಕೆಲಸ ನೀಡಲು ಕಾಮಗಾರಿಗಳನ್ನು ಸಿದ್ಧಪಡಿಸಲಾಗಿದೆ ಎಂದರು.
ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ಮಾತನಾಡಿ, ನರೇಗಾ ಯೋಜನೆಯಡಿ ಎಪ್ರಿಲ್ 1ರಿಂದ ಗ್ರಾ.ಪಂ ವ್ಯಾಪ್ತಿಯ ಪ್ರತಿಯೊಬ್ಬ ನೋಂದಾಯಿತ ಕೂಲಿಕಾರ ನಿರಂತರವಾಗಿ 100 ದಿನಗಳ ಕೆಲಸ ಪಡೆಯುವ ಅವಕಾಶ ಹೊಂದಿದ್ದು, ನಮೂನೆ -6ರಲ್ಲಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಕೆಲಸ ಪಡೆಯಬಹುದು. ಪ್ರಸ್ತುತ ಆರ್ಥಿಕ ವರ್ಷ ಕೂಲಿ ಮೊತ್ತ 370 ರೂ.ಗೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.
ಗ್ರಾ.ಪಂ ಅಧ್ಯಕ್ಷ ಕೆಂಚಪ್ಪ ಪೂಜಾರ ಮಾತನಾಡಿ, ಯೋಜನೆಯಡಿ ಪ್ರತಿ ಕೂಲಿಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಿಸಿ ವಾರ್ಷಿಕ 100 ಮಾನವ ದಿನಗಳ ಕೂಲಿ ಕೆಲಸ ನೀಡಲಾಗುತ್ತದೆ. ಗ್ರಾಮದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಎರೆ ಹುಳು ಘಟಕ, ದನದ ಕೊಟ್ಟಿಗೆ ಮುಂತಾದ ಕಾಮಗಾರಿಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಹಾಯಕ ನಿರ್ದೇಶಕ ಕುಮಾರ ಪೂಜಾರ ಮಾತನಾಡಿ, ಗ್ರಾಮೀಣ ಪ್ರದೇಶದ ಬಡವರಿಗೆ, ಶ್ರಮಿಕರಿಗೆ ನರೇಗಾ ಯೋಜನೆಯು ವರದಾನವಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ, ಜೊತೆಗೆ ಸಮಾನ ಕೆಲಸ. ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ, ತೃತೀಯ ಲಿಂಗಿಗಳಿಗೂ ಕೆಲಸ ನೀಡಲಾಗುತ್ತಿದೆ ಎಂದರು.
ಪಂಚಾಯತ ಅಭಿವೃದ್ಧಿ ಅಧಿಕಾರಿ ಅಮೀರ ನಾಯಕ ಮಾತನಾಡಿ, ನರೇಗಾ ಯೋಜನೆಯಡಿ ಉದ್ಯೋಗ ಚೀಟಿಯ ಮಹತ್ವ, ದೊರೆಯುವ ಸೌಲಭ್ಯವನ್ನು ಪಡೆಯಲು ನಿಯಮಾನುಸಾರ ಕೂಲಿ ಕಾರ್ಮಿಕರು ಕೆಲಸ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ತಾಲೂಕಾ ವೈದ್ಯಾಧಿಕಾರಿ ಡಾ. ಕೋನಾ ಮಾತನಾಡಿ, ನರೇಗಾ ಯೋಜನೆಯಡಿ ನಡೆಯುತ್ತಿರುವ ಸಮುದಾಯ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ನರೇಗಾ ಕೂಲಿಕಾರರಿಗೆ ಉತ್ತಮ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಸ್ಥಳದಲ್ಲಿಯೇ ಬಿಪಿ, ಶುಗರ್, ಮಧುಮೇಹ, ಅತಿ ರಕ್ತದೊತ್ತಡದಂತಹ ಪ್ರಾಥಮಿಕ ಅಸಾಂಕ್ರಾಮಿಕ ಗುಣಲಕ್ಷಣಗಳನ್ನು ಪತ್ತೆ ಹಚ್ಚಿ ಸೂಕ್ತ ಸಮಾಲೋಚನೆ ನೀಡಲಾಗುವುದು ಎಂದರು.
ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ, ತಾಲೂಕು ಐ.ಇ.ಸಿ ಸಂಯೋಜಕ ವಿರೇಶ, ತಾಂತ್ರಿಕ ಸಹಾಯಕ ಅಜಯ ಅಬ್ಬಿಗೇರಿ, ನರೇಗಾ ಸಿಬ್ಬಂದಿಗಳು, ಕಾಯಕ ಬಂಧುಗಳು, ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.
ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಈಗ ಓಒಒS ಅಪ್ಲಿಕೇಶನ್ ಗಮನ ಸೆಳೆದಿದೆ. ಕೇಂದ್ರ ಸರ್ಕಾರ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ ಅಪ್ಲಿಕೇಶನ್ ಕಡ್ಡಾಯಗೊಳಿಸಿದೆ. ಇದರಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಹಾಜರಾತಿಗಳನ್ನು ಜಿಯೋಟ್ಯಾಗ್ ಫೋಟೋಗ್ರಾಫ್ ಮುಖಾಂತರ ಪ್ರತಿ ದಿನ ಎರಡು ಬಾರಿ ಕಡ್ಡಾಯವಾಗಿ ಸೆರೆಹಿಡಿಯಲು ಕ್ರಮವಹಿಸಲಾಗುತ್ತಿದೆ.