ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದ್ದು, ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ. ಪ್ರತಿ ಕಾರ್ಮಿಕರಿಗೆ ದಿನಕ್ಕೆ 370 ರೂ. ಹಣ ಪಾವತಿಸಲಾಗುತ್ತದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಧರ್ಮರ ಕೃಷ್ಣಪ್ಪ ಹೇಳಿದರು.
ಅವರು ಸಮೀಪದ ದೊಡ್ಡೂರ ಗ್ರಾಮದ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿ ಮಾತನಾಡಿದರು.
ಕೆರೆ ಹೂಳೆತ್ತುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಕೊಳವೆ ಬಾವಿಗಳಲ್ಲಿ ನೀರಿನ ಏರಿಕೆ ಆಗಲಿದೆ. ಗ್ರಾಮಸ್ಥರು ತಮ್ಮ ಗ್ರಾಮದ ಕೆರೆಯ ಸಂರಕ್ಷಣೆಗೆ ಒತ್ತು ನೀಡಬೇಕು. ನರೇಗಾ ಯೋಜನೆಯು ಗ್ರಾಮೀಣ ಜನರ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ನರೇಗಾ ಯೋಜನೆಯಲ್ಲಿ ಕೆಲಸ ಒದಗಿಸಿ ಸ್ವಾವಲಂಬಿಗಳಾಗಿ ಮಾಡಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರು ಕೂಲಿ ಕೆಲಸಕ್ಕಾಗಿ ಪಟ್ಟಣಗಳಿಗೆ ಗುಳೆ ಹೋಗುವುದನ್ನು ತಪ್ಪಿಸಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಒದಗಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಜೊತೆಗೆ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಹೇಳಿದರು.
ನರೇಗಾ ಯೋಜನೆ ಅಡಿಯಲ್ಲಿ ಬೇಸಿಗೆ ಅವಧಿಯಲ್ಲಿ 60 ದಿನಗಳ ಕಾಲ ಕೆಲಸ ಪಡೆದು ಗರಿಷ್ಠ 22,200 ರೂ ಗಳಿಕೆ ಮಾಡಬಹುದು. ಇದರಿಂದ ರೈತರು ತಮ್ಮ ಕುಟುಂಬದ ಅಗತ್ಯ ಬಳಕೆಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮದ ಜನರು ಸ್ವಂತ ಊರಲ್ಲೇ ಕೂಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ದೊಡ್ಡೂರ ಗ್ರಾ.ಪಂ ಅಧ್ಯಕ್ಷರಾದ ಚಂದ್ರಶೇಖರ ಈಳಗೇರ, ಗ್ರಾ.ಪಂ ಸದಸ್ಯರಾದ ಮಲ್ಲೇಶ ಮಣ್ಣಮ್ಮನವರ, ಪ್ರಮುಖರಾದ ನಾನಪ್ಪ ಲಮಾಣಿ, ಗ್ರಾ.ಪಂ ಕಾರ್ಯದರ್ಶಿ ಆರ್.ಕೆ. ಗುರುವಿನ, ಬಿಎಫ್ಟಿ ತೀರಕಪ್ಪ ಲಮಾಣಿ, ಮಲ್ಲಿಕಾರ್ಜುನ ತಳವಾರ ಇತರರಿದ್ದರು.