ಉಗ್ರರ ದಾಳಿ: ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ – ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

Advertisement

ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು..

ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.

ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು

ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.


Spread the love

LEAVE A REPLY

Please enter your comment!
Please enter your name here