ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿಯ ಶ್ರೀ ಜ.ಫ.ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಂದ ಕಳೆದ ವರ್ಷ ಜೂನ್ ತಿಂಗಳಿನಿಂದ ಜಾರಿಯಲ್ಲಿರುವ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆಯ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಪಿಎಸ್ಐ ಚನ್ನಯ್ಯ ದೇವೂರ, ಹೊಸದಾಗಿ ಜಾರಿಯಾಗಿರುವ ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅವಶ್ಯವಿದ್ದು, ಅದಕ್ಕಾಗಿಯೇ ಇಲಾಖೆ ವತಿಯಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹೊಸದಾಗಿ ಜಾರಿಯಾಗಿರುವ ಕಾನೂನಿನಲ್ಲಿ ಸೆಕ್ಷನ್ಗಳು ಕಡಿಮೆ. ಆದರೆ, ಶಿಕ್ಷೆಯ ಪ್ರಮಾಣ ಹೆಚ್ಚಿದೆ. ವಿಶೇಷವಾಗಿ ಪೋಕ್ಸೋ ಕಾಯ್ದೆಯ ಬಗ್ಗೆಯೂ ತಿಳಿದುಕೊಳ್ಳಬೇಕು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಸಮಯವನ್ನು ಓದಿನ ಕಡೆಗೆ ಹರಿಸಬೇಕು. ಕಾನೂನಿಗೆ ವಿರುದ್ಧವಾದ ಯಾವುದೇ ದುಷ್ಕೃತ್ಯಗಳಲ್ಲಿ ಭಾಗಿಯಾಗಬಾರದು.
ಕಾಲೇಜುಗಳಲ್ಲಿ ರ್ಯಾಗಿಂಗ್ ಮಾಡಬಾರದು, ಸಹಪಾಠಿಗಳೊಡನೆ ಉತ್ತಮ ಬಾಂಧವ್ಯ ಹೊಂದಿರಬೇಕು. ಜೊತೆಗೆ ದುಶ್ಚಟಗಳಿಂದ ಮುಕ್ತರಾಗಿರಬೇಕು. ಸಂಚಾರಿ ನಿಯಮಗಳನ್ನು ಸಹ ಅರ್ಥೈಸಿಕೊಂಡು ಅವುಗಳ ಪಾಲನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕೆಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ. ಅರಹುಣಸಿ, ಉಪನಸ್ಯಾಕರು, ಪೊಲೀಸ್ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.