
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕೇಂದ್ರ ಸರ್ಕಾರದ ನಿರ್ಲಕ್ಷವೇ ಈ ಘಟನೆಗೆ ಕಾರವಾಗಿದೆ ಎಂದು ಅಂಜುಮನ್ ಇಸ್ಲಾಂ ಕಮಿಟಿಯ ಮಾಜಿ ಚೇರಮನ್ ಎ.ಡಿ. ಕೋಲಕಾರ ಆರೋಪಿಸಿದರು.
ನಗರದ ಕೆ.ಕೆ. ಸರ್ಕಲ್ನಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಕೃತ್ಯವನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು.
ಈ ಘಟನೆಯಲ್ಲಿ ಸುಮಾರು 28 ಜನ ಪ್ರವಾಸಿಗರು ಮೃತಪಟ್ಟಿದ್ದಾರೆ. ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ದೇಶದ ಕೋಮು ಸೌಹಾರ್ದತೆ ಮತ್ತು ಶಾಂತಿಯನ್ನು ಕದಡುವ ಪ್ರಯತ್ನವಾಗಿದೆ. ಇದು ಮಾನವನ ಮೇಲೆ ನಡೆದ ದಾಳಿ ಮಾತ್ರವಲ್ಲ, ಭಾರತದ ಬಹುತ್ವ, ಶಾಂತಿ ಸಹಬಾಳ್ವೆಯ ಮೌಲ್ಯಗಳ ಮೇಲೆ ನಡೆಸಿದ ದಾಳಿಯಾಗಿದೆ ಎಂದರು.
ಧರ್ಮದ ಹೆಸರಿನಲ್ಲಿ ಇಂತಹ ದಾಳಿಗಳನ್ನು ಮಾಡುವ ಭಯೋತ್ಪಾದಕರ ವಿರುದ್ಧ ಕೇಂದ್ರ ಸರ್ಕಾರ ಕಠಿಣಕ್ರಮ ಕೈಗೊಳ್ಳಬೇಕು. ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಕುಟುಂಬದವರೊಂದಿಗೆ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲುತ್ತೇವೆ. ನಾವು ಜವಾಬ್ದಾರಿಯುತ ಭಾರತೀಯ ನಾಗರಿಕರಾಗಿ ಮತ್ತು ಶಾಂತಿ, ನ್ಯಾಯ ಹಾಗೂ ಮಾನವ ಜೀವನದ ಪಾವಿತ್ರ್ಯತೆಯನ್ನು ಎತ್ತಿ ಹಿಡಿಯುಲು ಮುಂದಾಗಬೇಕಿದೆ ಎಂದರಲ್ಲದೆ, ಈ ಕರಾಳ ಶಕ್ತಿಗಳನ್ನು ಸುಮ್ಮನೆ ಬಿಡಬಾರದು. ಭಯೋತ್ಪಾದಕರನ್ನು ಪತ್ತೆ ಮಾಡಿ ಗಲ್ಲುಶಿಕ್ಷೆ ವಿಧಿಸಲು ಮುಂದಾಗಬೇಕಿದೆ ಎಂದರು.
ಅಂಜುಮನ್ ಇಸ್ಲಾಂ ಕಮಿಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಮಾತನಾಡಿ, ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡು ಆಂತಕದಲ್ಲಿರುವ ಕುಟುಂಬಗಳಿಗೆ ಸೂಕ್ತ ಭದ್ರತೆ ಒದಗಿಸುವುದರೊಂದಿಗೆ ಸರ್ಕಾರ ಪರಿಹಾರ ನೀಡಬೇಕು. ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮಗಳಲ್ಲಿ ಈ ದಾಳಿಯನ್ನು ಗುರಿಯಾಗಿಸಿಕೊಂಡು ಮುಸ್ಲಿಂ ಸಮಾಜದ ಬಗ್ಗೆ ಸುಳ್ಳುಗಳನ್ನು ಹಬ್ಬಿಸಿ ಸಮುದಾಯದ ತೇಜೋವಧೆ ಮಾಡಿ, ದೇಶದ ಕೋಮು ಸೌಹಾರ್ದತೆ ಹಾಳು ಮಾಡುತ್ತಿರುವ ಪಟ್ಟಭದ್ರ ಕೋಮುವಾದಿ ಶಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಪುರಸಭೆ ಸದಸ್ಯ ರಾಜು ಸಾಂಗ್ಲಿಕರ ಮಾತನಾಡಿ, ಬಹುತ್ವ ಭಾರತವನ್ನು ಒಡೆದು ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದರೊಂದಿಗೆ ಈ ದೇಶವನ್ನು ವಿಭಜಿಸುವುದೇ ಅವರ ಗುರಿಯಾಗಿದ್ದು, ಕೂಡಲೇ ಕೇಂದ್ರ ಸರ್ಕಾರ ಭಯೋತ್ಪಾದನೆ ನಿಗ್ರಹಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಾಮಿಯಾ ಮಸೀದಿಯಿಂದ ಪ್ರಾರಂಭಗೊಂಡ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಕಾಲ್ನಡಿಗೆ ಮೂಲಕ ಸಾಗಿ ಕೆ.ಕೆ. ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಮನವಿಯನ್ನು ತಹಸೀಲ್ದಾರರ ಮೂಲಕ ರಾಷ್ಟçಪತಿಗಳಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ಚೇರಮನ್ನನ್ ಹಸನಸಾಬ ತಟಗಾರ, ಕಾರ್ಯದರ್ಶಿ ಫಯಾಜ್ ತೋಟದ, ಎಂ.ಬಿ. ಕಂದಗಲ್ಲ, ದಾದು ಹಣಗಿ, ಮುಸ್ತಾಕ ಹಕ್ಕಿ, ಸುಭಾನಸಾಬ ಆರಗಿದ್ದಿ, ಭಾಷಾ ಮುದಗಲ್ಲ, ಖಾಸಿಂಸಾಬ ಮುಚ್ಚಾಲಿ, ಅರಳಿಕಟ್ಟಿ, ಮಾಸುಮಲಿ ಮದಗಾರ, ಇಮ್ರಾನ ಅತ್ತಾರ ಸೇರಿದಂತೆ ಇತರರು ಇದ್ದರು.
ಅಂಜುಮನ್ ಇಸ್ಲಾಂ ಕಮಿಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಮಾತನಾಡಿ, ಈ ದಾಳಿಯು ಕೇಂದ್ರ ಸರ್ಕಾರದ ನಿರ್ಲಕ್ಷ್ಯದ ಪರಿಣಾಮವಾಗಿದ್ದು, ಪ್ರಧಾನಮಂತ್ರಿಗಳು, ಗೃಹ ಸಚಿವರು ನೈತಿಕ ಹೊಣೆಹೊತ್ತು ಕೂಡಲೇ ರಾಜೀನಾಮೆ ನೀಡಬೇಕು. ಈ ದುರಂತದಿಂದಾಗಿ ಕೀಳುಮಟ್ಟದ ದ್ವೇಷದ ಬೀಜ ಚಿಗುರಲು ಅವಕಾಶ ನೀಡಬಾರದು. ಪರಸ್ಪರ ಗೌರವ ಹಾಗೂ ಕೋಮು ಸಾಮರಸ್ಯವನ್ನು ಕಾಪಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ ಎಂದರು.

