ವಿಜಯಸಾಕ್ಷಿ ಸುದ್ದಿ, ಗದಗ: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಶೆಟ್ಟಿ ಬಣದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ಬೇಲೂರ ನೇತೃತ್ವದಲ್ಲಿ ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಸಲ್ಲಿಸಿ ವೆಂಕಟೇಶ ಬೇಲೂರ ಮಾತನಾಡಿ, ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಟ್ಟುಕೊಂಡು ನಡೆಸಿದ ದಾಳಿ ದೇಶವನ್ನೇ ಬೆಚ್ಚಿ ಬೀಳಿಸಿದೆ. ಹಿಂದೂಗಳ ಮೇಲೆ ನಡೆದಿರುವ ದಾಳಿ ಖಂಡನೀಯ ಎಂದು ಹೇಳಿದರು.
ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ದಾವಲಸಾಬ ಆರ್.ಮುಳಗುಂದ ಮಾತನಾಡಿ, ಶಾಂತವಾಗಿದ್ದ ಜಮ್ಮು ಕಾಶ್ಮೀರದಲ್ಲಿ ಮತ್ತೆ ರಕ್ತಪಾತ ನಡೆದಿರುವುದು ಖಂಡನೀಯ ಎಂದರು.
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಕೆ.ಭಂಡಾರಿ, ಕಾರ್ಮಿಕ ಘಟಕದ ಗದಗ ಜಿಲ್ಲಾಧ್ಯಕ್ಷ ತಿಮ್ಮಣ್ಣ ಡೋಣಿ, ಜಿಲ್ಲಾ ವಕ್ತಾರ ಪರಶುರಾಮ ಬಂಕದಮನಿ, ಗದಗ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಹದೇವ ಕೋಟಿ, ಗದಗ ತಾಲೂಕಾಧ್ಯಕ್ಷ ಹನುಮಂತಸಾ ಶಿದ್ಲಿಂಗ, ಜಿಲ್ಲಾ ಕಾನೂನು ಸಲಹೆಗಾರ ಮಂಜುನಾಥ ಶಾಂತಗೇರಿ, ಜಿಲ್ಲಾ ಮುಖಂಡರಾದ ಮೈಲಾರಪ್ಪ ಕೋಟೆಪ್ಪನವರ, ಮಣಿಕಂಠ ಭಂಡಾರಿ, ಶಂಕರ ದಹಿಂಡೆ, ವಾಸು ಹೂಗಾರ ಮುಂತಾದವರು ಉಪಸ್ಥಿತರಿದ್ದರು.