ವಿಜಯಸಾಕ್ಷಿ ಸುದ್ದಿ, ಧಾರವಾಡ: ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಜಿಲ್ಲೆಯಲ್ಲಿ ಮೇ 5ರಿಂದ ಮೇ 17, 2025ರವರೆಗೆ ಮನೆ ಮನೆಗೆ ತೆರಳಿ ಸಮೀಕ್ಷಾ (ಗಣತಿ) ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ಜಿಲ್ಲೆಯ ಶಿಕ್ಷಕರನ್ನು ಹಾಗೂ ಇತರರನ್ನು ನೇಮಿಸಲಾಗಿದ್ದು, ಸಮೀಕ್ಷೆ ಅವಧಿಯಲ್ಲಿ ಸಮೀಕ್ಷೆಗೆ ಬೇಕಾದ ಅಗತ್ಯ ಮಾಹಿತಿಯನ್ನು ಒದಗಿಸಿ, ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದವರಲ್ಲಿ ಕೋರಿದ್ದಾರೆ.
ಸಮೀಕ್ಷೆಗೆ ಸಂಬಂಧಿಸಿದಂತೆ ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆದಾರರಿಗೆ ಮತ್ತು ಸಾರ್ವಜನಿಕರಿಗೆ ಗೊಂದಲ, ಸಮಸ್ಯೆಗಳು ಉಂಟಾದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅಲ್ಲಿನ ಸಹಾಯವಾಣಿ ಸಂಖ್ಯೆ: 0836-2244001ಗೆ ಕರೆ ಮಾಡಿ, ಮಾಹಿತಿ ಪಡೆಯಬಹುದೆಂದು ಅವರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.