ಬೆಂಗಳೂರು: ಪಹೆಲ್ಗಾಮ್ನ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆಗೆ ರಾಷ್ಟ್ರಾದ್ಯಂತ ಸಂಭ್ರಮ ಮತ್ತು ಶ್ಲಾಘನೆ ವ್ಯಕ್ತವಾಗಿದ್ದು,
ಅನೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗಿದೆ. ಸಚಿವ ರಾಮಲಿಂಗಾರೆಡ್ಡಿ ಅವರು ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸೂಚನೆ ನೀಡಿದ್ದರು.
ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂದೇಶ ರವಾನಿಸಿದ್ದಾರೆ.
ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.
ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ.
ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.



