ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಸಹನಟ ಕಪಿಲ್ ಇತ್ತೀಚೆಗೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಈ ಬಗ್ಗೆ ಸಾಕಷ್ಟು ಊಹಾಪೋಹ ಹರಿದಾಡಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಘಟನೆ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಪ್ರತಿಕ್ರಿಯೆ ನೀಡಿದೆ.
“ಈ ಘಟನೆ ‘ಕಾಂತಾರ ಚಾಪ್ಟರ್ 1 ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಆ ದಿನ ಯಾವುದೇ ಚಿತ್ರೀಕರಣ ನಿಗದಿಯಾಗಿರಲಿಲ್ಲ ಮತ್ತು ಆ ಘಟನೆ ಅವರ ವೈಯಕ್ತಿಕ ಕಾರ್ಯಕ್ರಮದಲ್ಲಿ, ಚಲನಚಿತ್ರ ಸಂಬಂಧಿತ ಚಟುವಟಿಕೆಗಳ ವ್ಯಾಪ್ತಿಯ ಹೊರಗೆ ಸಂಭವಿಸಿದೆ. ದಯವಿಟ್ಟು ಈ ಘಟನೆಯನ್ನು ‘ಕಾಂತಾರ’-1 ಚಿತ್ರ ಅಥವಾ ಅದರ ಸಿಬ್ಬಂದಿಯೊಂದಿಗೆ ಯಾವುದೇ ಸಂಬಂಧವನ್ನು ಕಲ್ಪಿಸಬಾರದು ಎಂದು ನಾವು ವಿನಂತಿಸುತ್ತೇವೆ” ಎಂದು ಹೊಂಬಾಳೆ ಸಂಸ್ಥೆ ಸ್ಪಷ್ಟನೆ ನೀಡಿದೆ.
ಕಪಿಲ್ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಆಗ್ರಹಿಸಿದೆ. ಆತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇದೆಲ್ಲದರ ಬೆನ್ನಲ್ಲೇ ಚಿತ್ರತಂಡ ಸ್ಪಷ್ಟನೆ ನೀಡಿದ್ದು ಕಪಿಲ್ ಸಾವಿಗೂ ಕಾಂತಾರ ಚಿತ್ರತಂಡಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದೆ. ಅಂದ ಹಾಗೆ ‘ಕಾಂತಾರ-1’ ಸಿನಿಮಾ ಚಿತ್ರೀಕರಣ ಆರಂಭವಾದ ದಿನದಿಂದಲೂ ಒಂದಿಲ್ಲೊಂದು ವಿಘ್ನ ಎದುರಾಗುತ್ತಲೆ ಇದೆ.
ಕುಂದಾಪುರದಲ್ಲಿ ಭಾರೀ ಸೆಟ್ ನಿರ್ಮಾಣ ಮಾಡಿ ‘ಕಾಂತಾರ’-1 ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದೆ. ಭಾರೀ ಸಂಖ್ಯೆಯ ಸಹಕಲಾವಿದರನ್ನು ಚಿತ್ರಕ್ಕಾಗಿ ಬಳಸಿಕೊಳ್ಳಲಾಗ್ತಿದೆ. ಕರ್ನಾಟಕದ ಸಹಕಲಾವಿದರ ಜೊತೆಗೆ ಕೇರಳ ಮೂಲದ ಕಲಾವಿದರು ಕೂಡ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಮೃತ ಕಪಿಲ್ ಕೇರಳ ಮೂಲದವರು. ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು.