ಮಡಿಕೇರಿ:- ಕೊಡಗು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆ ಆಗುವ ಸಾಧ್ಯತೆ ಇರುವುದರಿಂದ ಮತ್ತೆ ಭೂಕುಸಿತ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ.
ಎಸ್, 2018 ರಲ್ಲಿ ಭೀಕರ ಪ್ರಕೃತಿ ವಿಕೋಪಕ್ಕೆ ನಡುಗಿದ್ದ ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಬಂದರೆ ಜನತೆ ಅಕ್ಷರಶಃ ನಡುಗಿ ಹೋಗುತ್ತಾರೆ. ಈ ಬಾರಿ ಕೂಡ ಅಂಥದ್ದೇ ಪರಿಸ್ಥಿತಿ ಬರಬಹುದೇ ಎಂಬ ಆತಂಕ ಈಗ ವ್ಯಕ್ತವಾಗಿದೆ. ಹಿಂದೆಲ್ಲಾ ಎಂತಹ ರಣ ಭೀಕರ ಮಳೆ, ಗುಡುಗು ಸಿಡಿಲು ಬಂದರೂ ಕೂಡ ಕೊಡಗು ಜಿಲ್ಲೆಯ ಜನ ಅಂಜುತ್ತಿರಲಿಲ್ಲ. ಆದರೆ 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಕೊಡಗಿಗೆ ಕೊಡಗು ಜನತೆಯನ್ನು ಅಕ್ಷರಶಃ ನಡುಗುವಂತೆ ಮಾಡಿತ್ತು. ಸಣ್ಣ ಮಳೆ ಗುಡುಗು ಬಂದರೂ ಜನ ಹೆದರುವಂತೆ ಮಾಡಿತ್ತು. ಕಳೆದ ಎರಡು ವರ್ಷಗಳಲ್ಲಿ ಭಾರಿ ಸಮಸ್ಯೆ ಏನೂ ಆಗಿಲ್ಲ. ಆದರೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಆಡಳಿತಕ್ಕೆ ಒಂದು ವರದಿ ಸಲ್ಲಿಸಿದ್ದು, ಇದು ಕೂಡ ಜನತೆಯ ಆತಂಕ ಹೆಚ್ಚಿಸಿದೆ. ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯದ ಸಾಧ್ಯತೆ ಇದೆ ಎಂದು ಅವರು ವರದಿಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಕೊಡಗಿನಲ್ಲಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.
ತಜ್ಞರ ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಕೂಡ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಹೇಳಿದ ಆ ಪ್ರದೇಶಗಳಲ್ಲಿ ಏನಾದರೂ ಬದಲಾವಣೆಗಳು ಕಾಣಿಸುತ್ತಿವೆಯಾ ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದೆ. ತಜ್ಞರು ಎಚ್ಚರಿಕೆ ನೀಡಿರುವ ಪ್ರದೇಶಗಳಲ್ಲಿ ಅಗತ್ಯ ಸೇವೆಗಳು ಸುಲಭವಾಗಿ ಲಭ್ಯವಿರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.