ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಧ್ವನಿಸುರಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎನ್ನುವ ಮೂಲಕ ದುರಹಂಕಾರದಿಂದ ಮಾತನಾಡಿರುವ ತಮಿಳು ನಟ ಕಮಲ್ ಹಾಸನ್ ಈ ಕೂಡಲೇ ಕನ್ನಡಿಗರ ಕ್ಷಮಾಪಣೆ ಕೇಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಗೌರವಾಧ್ಯಕ್ಷ ನಿಂಗನಗೌಡ ಎಸ್.ಮಾಲಿಪಾಟೀಲ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತವು ಸೇರಿದಂತೆ ವಿಶ್ವದ ಹತ್ತು ಹಲವು ಕಡೆಗಳಲ್ಲಿ ಕನ್ನಡದ ಹೆಗ್ಗುರುತುಗಳು ಶತ ಶತಮಾನಗಳಿಂದಲೂ ಇದೆ. ಜಗತ್ತಿನ ಹಲವು ಭಾಷೆಗಳಲ್ಲಿ ಕನ್ನಡಕ್ಕೆ ಶ್ರೇಷ್ಠ ಮಾನ್ಯತೆ ಇದೆ ಎಂದು ಕನಿಷ್ಠ ತಿಳುವಳಿಕೆ ಇಲ್ಲದೆ ತಮಿಳು ನಟ ಕಮಲಹಾಸನ್ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ್ರು, ಕಮಲ್ ಹಾಸನ್ ಅವರ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೊಳಿಸಬಾರದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.