ಮಂಗಳೂರು: ಮಂಗಳೂರಿನಲ್ಲಿ ಹಾಗೂ ಉಳ್ಳಾಲ ಪರಿಸರದಲ್ಲಿ ಗುರುವಾರ ತಡರಾತ್ರಿಯಿಂದಲೂ ಧಾರಕಾರ ಮಳೆಯಾಗುತ್ತಿದೆ. ಉಳ್ಳಾಲ, ಕಲ್ಲಾಪು, ಬಗಂಬಿಲ, ಪಿಲಾರ್, ಅಂಬಿಕಾರಸ್ತೆ, ಕೋಟೆಕಾರು, ತಲಪಾಡಿ, ಪಾವೂರು, ಹರೇಕಳ, ಉಳಿಯ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಮನೆಗಳು, ಕಾರುಗಳು, ಬೈಕ್ಗಳು ಎಲ್ಲವೂ ಮುಳುಗಡೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಸದ್ಯ ಮದೀನದಿಂದ ಮಾಹಿತಿ ಪಡೆದಿರುವ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್, ಮುಂಜಾಗ್ರತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು, ಸೋಮೇಶ್ವರ, ಕೋಟೆಕಾರು ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ನದಿ ತಗ್ಗು ಪ್ರದೇಶಗಳಿಗೆ ಕೃತಕ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗಿದೆ.
ಈ ಸಲುವಾಗಿ ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಎನ್ಡಿಆರ್ಎಫ್ ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ.