ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಖನನಕ್ಕೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಸಿದ್ದರಾಮಯ್ಯ ಅವರ ಆಗಮನದ ಹಿನ್ನೆಲೆಯಲ್ಲಿ ಭೂಮಿಪೂಜೆಗಾಗಿ ನೂತನ ಬೆಳ್ಳಿಯ ಗುದ್ದಲಿ, ಸಲಾಕೆ ಸಿದ್ಧಪಡಿಸಲಾಗಿತ್ತು. ಭೂಮಿಪೂಜೆಯ ನಂತರ ಹಾಲಿನಿಂದ ಕೈತೊಳೆದುಕೊಂಡು ವಿಶೇಷ ಪೂಜೆಯಲ್ಲಿ ಭಾಗವಹಿಸಿ, ಶಿಲಾನ್ಯಾಸ ನೆರವೇರಿಸಿದರು. ನಂತರ ಕಾಶೀ ವಿಶ್ವನಾಥ ಹಾಗೂ ನನ್ನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕಾಶೀ ವಿಶ್ವನಾಥ ದೇವಸ್ಥಾನ ಭೇಟಿಯ ನಂತರ ಬಯಲು ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲರ ಜೊತೆಗೂಡಿ ಬ್ಯಾಟರಿ ಚಾಲಿತ ವಾಹನದಲ್ಲಿ ಪ್ರದಕ್ಷಿಣೆ ಹಾಕುತ್ತಾ, ಇತಿಹಾಸಕಾರರಿಂದ ಅನ್ವೇಷಣೆಯಲ್ಲಿ ದೊರೆತ ಎಲ್ಲ ಪ್ರಾಚ್ಯಾವಶೇಷಗಳ ಮಾಹಿತಿ ಪಡೆದರು.
ಸಮಾರಂಭದಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ಸಿ.ಸಿ. ಪಾಟೀಲ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಲಕ್ಕುಂಡಿ ಗ್ರಾ.ಪಂ ಅಧ್ಯಕ್ಷ ಕೆಂಚಪ್ಪ ಪೂಜಾರ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಮಾಜಿ ಸಂಸದ ಐ.ಜಿ. ಸನದಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯತ್ ಸಿಇಓ ಭರತ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಶರಣು ಗೋಗೇರಿ, ಪಿಡಿಒ ಅಮೀರ ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.
ಲಕ್ಕುಂಡಿಯಲ್ಲಿ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ನರಗುಂದ ಕ್ಷೇತ್ರದ ಮಾಜಿ ಶಾಸಕ ಬಿ.ಆರ್. ಯಾವಗಲ್ ಅವರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ, ಯಾವಗಲ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸ್ವಾಗತಕ್ಕೆ ಹಾಕಿದ್ದ ಬ್ಯಾನರ್ಗಳಲ್ಲಿ ಯಾವಗಲ್ ಅವರ ಭಾವಚಿತ್ರವಿರಲಿಲ್ಲ ಎಂದು ಅಭಿಮಾನಿಗಳು ಪಕ್ಷದ ವರಿಷ್ಠರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಎಚ್.ಕೆ. ಪಾಟೀಲರು ಲಕ್ಕುಂಡಿ ಕುರಿತಾದ ಪುಸ್ತಕ ಕೊಟ್ಟಿದ್ದರು. ಆದರೆ ಅದನ್ನು ಓದಲು ಸಾಧ್ಯವಾಗಿರಲಿಲ್ಲ. ಈಗ ಇಲ್ಲಿನ ಐತಿಹಾಸಿಕ ದೇವಸ್ಥಾನ, ಪ್ರಾಚ್ಯಾವಶೇಷಗಳನ್ನು ನೋಡಿದ ಮೇಲೆ, ಆ ಪುಸ್ತಕವನ್ನು ಓದಲೇಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಬಯಲು ವಸ್ತುಸಂಗ್ರಹಾಲಯಕ್ಕೆ ಜಮೀನು ನೀಡಲು ರೈತರು ನೀಡಿದ ಒಪ್ಪಿಗೆ ಪತ್ರವನ್ನು ಸ್ವೀಕರಿಸಿ ಧನ್ಯವಾದಗಳನ್ನು ತಿಳಿಸಿದರು.
ಗದಗ ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ಉದ್ಘಾಟಿಸಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಲು ನೋವು ಇದ್ದ ಕಾರಣ ಮುಖ್ಯದ್ವಾರದ ಮೆಟ್ಟಿಲು ಏರಲು ಸಾಧ್ಯವಾಗಲಿಲ್ಲ. ಹೀಗಾಗಿ ರಂಗಮಂದಿರದ ಎಡ ಮತ್ತು ಬಲಭಾಗದಲ್ಲಿದ್ದ ಬಾಗಿಲುಗಳ ಮೂಲಕ ಅವರನ್ನು ಕರೆತರಲು ಸಚಿವ ಎಚ್.ಕೆ. ಪಾಟೀಲ ಮುಂದಾದರು. ಆದರೆ, ಆ ಬಾಗಿಲುಗಳನ್ನೂ ಸಕಾಲದಲ್ಲಿ ತೆರೆಯಲು ಸಾಧ್ಯವಾಗದ ಕಾರಣ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದರು.