ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಲಕ್ಕುಂಡಿ ಚಾಲುಕ್ಯರ ರಾಜಧಾನಿಯಾಗಿತ್ತು. ಅವರ ಕಾಲದಲ್ಲಿ ಅನೇಕ ದೇವಸ್ಥಾನ, ಕೋಟೆಗಳನ್ನು ಕಟ್ಟಿಸಿದ್ದರು. ಹೀಗಾಗಿ ಲಕ್ಕುಂಡಿ ಅಭಿವೃದ್ಧಿಗೆ 2017-18ರಲ್ಲಿ ನಮ್ಮ ಸರ್ಕಾರದ ಅವಧಿಯಲ್ಲೇ ಪ್ರಾಧಿಕಾರ ರಚನೆಯಾಗಿತ್ತು. ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲರ ಆಸಕ್ತಿಯಿಂದಾಗಿ ಇಲ್ಲಿ ಬಯಲು ವಸ್ತುಸಂಗ್ರಹಾಲಯ ನಿರ್ಮಾಣವಾಗಲಿದೆ. ಅದಕ್ಕೆ ಬೇಕಾದ ಅನುದಾನ ಒದಗಿಸಲಾಗುವುದು. ರಾಜ್ಯದಲ್ಲಿ ಅವಶ್ಯವಿರುವ ಕಡೆ ಉತ್ಖನನ ನಡೆಸಿ, ನಮ್ಮ ಪ್ರಾಚೀನ ಪರಂಪರೆ, ಇತಿಹಾಸವನ್ನು ಪರಿಚಯಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.
ಇಲ್ಲಿ ದೊರೆತಿರುವ ಅವಶೇಷಗಳ ಪುನರುಜ್ಜೀವನಕ್ಕೆ ಸರ್ಕಾರದಿಂದ ಅನುದಾನ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರಲ್ಲದೆ, ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು.
ಕಾನೂನು, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ, ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ, ಸಂಸದರಾದ ಪಿ.ಸಿ. ಗದ್ದಿಗೌಡರ, ಶಾಸಕರುಗಳಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ಎನ್.ಎಚ್. ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಲಕ್ಕುಂಡಿ ಗ್ರಾ.ಪಂ ಅಧ್ಯಕ್ಷ ಕೆಂಚಪ್ಪ ಪೂಜಾರ, ಗ್ರಾ ಪಂ ಉಪಾಧ್ಯಕ್ಷರು, ಸದಸ್ಯರು, ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಮಾಜಿ ಸಂಸದ ಐ.ಜಿ. ಸನದಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಸಿ.ಇ.ಓ ಭರತ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ, ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡಿ, ಬಳಿಕ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.