ವಿಜಯಸಾಕ್ಷಿ ಸುದ್ದಿ, ಗದಗ: 2025-26 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಯ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರವು ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಜೂನ್ 12ರವರೆಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದೆ.
ಐದನೇ ದಿನವಾದ ಮಂಗಳವಾರ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕಿನ ಛಬ್ಬಿ, ರಣತೂರ, ಚವಡಾಲ, ಸಂಕದಾಳ, ಸೂರಣಗಿ ಮತ್ತು ಬಟ್ಟೂರು ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿತ್ತು. ಐ.ಸಿ.ಎ.ಆರ್-ಗೋಡಂಬಿ ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿಗಳು, ಕರ್ನಾಟಕ ಸರಕಾರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿ, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು, ಪಶು ಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ರೈತ ಮುಖಂಡರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಈ ಅಭಿಯಾನದಲ್ಲಿ ವಿವಿಧ ತಂತ್ರಜ್ಞಾನಗಳಾದ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ತರಬೇತಿ ನೀಡಲಾಯಿತು. ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಮುಂಗಾರು ಹಂಗಾಮಿನ ಅಡಿ ಅಭಿವೃದ್ಧಿಪಡಿಸಿದ ಮುಂಗಾರು ಬೆಳೆಗಳಾದ ಹೆಸರು, ಶೇಂಗಾ, ಸೂರ್ಯಕಾಂತಿ, ಗೋವಿನ ಜೋಳ, ಈರುಳ್ಳಿ ಬೆಳೆಗಳ ಕುರಿತ ಕೃಷಿ ಕೈಪಿಡಿಯನ್ನು ರೈತರಿಗೆ ನೀಡಲಾಯಿತು. ಜೊತೆಗೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು.