ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಸುಮಾರು 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಸಾಕಷ್ಟು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆ ಪೂರ್ಣವಾಗುವವರೆಗೂ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡುವಂತೆ ಮನವಿ ಮಾಡಿದೆ.
ಘಟನೆ ಬಗ್ಗೆ ಸೂಕ್ತ ತನಿಖೆ ನಡೆಯಬೇಕು, ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸಿರುವ ಅಧಿಕಾರಿಗಳಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು. ಜೊತೆಗೆ ತನಿಖೆ ಮುಗಿಯುವವರೆಗೂ 11 ಜನರ ಮಾರಣಹೋಮಕ್ಕೆ ನೇರ ಕಾರಣವಾಗಿರುವ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡಬೇಕೆಂದು ಮನವಿ ಸಲ್ಲಿಸಲಾಗಿದೆ.
ಘಟನೆ ವಿವರ:
ಐಪಿಎಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಆರ್ಸಿಬಿ ತಂಡವನ್ನು ಅಭಿನಂದಿಸುವ ಹಾಗೂ ವಿಜಯೋತ್ಸವ ಸಮಾರಂಭ ಜೂನ್ 4ರಂದು ವಿಧಾನಸೌಧ ಹಾಗೂ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು. ಆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಜನಪ್ರತಿನಿಧಿಗಳು ಹಾಗೂ ಅನೇಕ ಅಧಿಕಾರಿಗಳು ಭಾಗಿಯಾಗಿದ್ದರು.
ಖಾಸಗಿ ಕಂಪನಿಯೊಂದರ ಒಡೆತನದಲ್ಲಿರುವ ಆರ್ಸಿಬಿ ತಂಡವನ್ನು ಸರ್ಕಾರದ ಅನುಮತಿ ಇಲ್ಲದೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಮಾರಂಭ ಏರ್ಪಡಿಸಿ ಸನ್ಮಾನಿಸಲಾಗಿದೆ. ಬೃಹತ್ ಸಾರ್ವಜನಿಕ ಸಮಾರಂಭ ಇದಾಗಿದ್ದು, ಸಂಭವನೀಯ ಅನಾಹುತಗಳನ್ನು ಮನಗಂಡು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯೇ ಈ ಸಮಾರಂಭ ನಡೆಸಲು ಸಾಧ್ಯವಿಲ್ಲ ಎಂದಿತ್ತು. ಆದರೂ ಸಿಎಂ-ಡಿಸಿಎಂ ಅವರು ಹಠಕ್ಕೆ ಬಿದ್ದು ಅಧಿಕಾರ ದುರುಪಯೋಗಪಡಿಸಿಕೊಂಡು ಆರ್ಸಿಬಿ ಎಂಬ ಖಾಸಗಿ ಕ್ರಿಕೆಟ್ ತಂಡವನ್ನು ವಿಧಾನಸೌಧ ಆವರಣಕ್ಕೆ ಕರೆಸಿಕೊಂಡು ಸನ್ಮಾನಿಸಿ, ಮಾಧ್ಯಮಗಳ ಮೂಲಕ ಭಾರೀ ಪ್ರಚಾರ ಮಾಡಿಸಿರುತ್ತಾರೆ. ಆ ಸಮಾರಂಭವನ್ನು ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರಿಂದ ನೂಕು ನುಗ್ಗಲು ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು.