ಮಂಗಳೂರು:- ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ರಾಜ್ಯ ಗೃಹಸಚಿವಾಲಯ ಆದೇಶ ಹೊರಡಿಸಿದೆ.
ಈ ಹಿಂದೆ ಬಿಜೆಪಿ ಕಾರ್ಯಕರ್ತರು, ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು. ಇದೀಗ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ರಾಜ್ಯ ಗೃಹಸಚಿವಾಲಯ ಆದೇಶ ಹೊರಡಿಸಿದೆ.
ಘಟನೆ ವಿವರ:
ಸುಹಾಸ್ ಶೆಟ್ಟಿ(32)ಯನ್ನು ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ದಾಳಿ ಮಾಡಿ ಕೊಲೆಗೈದ ಘಟನೆ ನಗರದ ಹೊರವಲಯದ ಬಜ್ಪೆ ಕಿನ್ನಿಪದವು ಎಂಬಲ್ಲಿ ಮೇ 1ರಂದು ರಾತ್ರಿ ನಡೆದಿತ್ತು. ಸುಹಾಸ್ ಶೆಟ್ಟಿ ಎರಡು ವರ್ಷಗಳ ಹಿಂದೆ ಸುರತ್ಕಲ್ನಲ್ಲಿ ನಡೆದಿದ್ದ ಫಾಝಿಲ್ ಎಂಬಾತನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಅಲ್ಲದೆ, ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಫಾಝಿಲ್ ಹತ್ಯೆ ನಡೆದಿತ್ತು.
ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ದುಷ್ಕರ್ಮಿಗಳು, ನಡುರಸ್ತೆಯಲ್ಲೇ ಕೊಚ್ಚಿ ಕೊಂದು ಹಾಕಿದ್ದರು. ಕೊಲೆಯ ವಿಡಿಯೋ ಸೆರೆಯಾಗಿದ್ದು, ಜಾಲತಾಣಗಳಲ್ಲಿ ವೈರಲ್ ಆಗಿತ್ತು.