ವಿಶೇಷ ನೋಂದಣಿ ಅಭಿಯಾನ ಜೂನ್ 14ರಂದು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪಂಚ ಗ್ಯಾರಂಟಿಗಳಿಂದ ದೂರವಾಗಿರುವ ಅರ್ಹ ಕುಟುಂಬಗಳನ್ನು ಪಂಚ ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಸೇರಿಸಲು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಜೂನ್ 14ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿಗಳ ಅನುಷ್ಠಾನದಿಂದ ಗದಗ ತಾಲೂಕು, ಜಿಲ್ಲೆ ಸೇರಿ ರಾಜ್ಯಾದ್ಯಂತ ಬಡತನರೇಖೆಯಲ್ಲಿದ್ದ ಕುಟುಂಬಗಳನ್ನು ಆರ್ಥಿಕವಾಗಿ ಮೇಲೆತ್ತಲು ಸಹಕಾರಿಯಾಗಿದೆ. ಈಗಾಗಲೇ ಗದಗ ತಾಲೂಕಿನಲ್ಲಿ ಶೇ. 98ಕ್ಕೂ ಅಧಿಕ ಕುಟುಂಬಗಳು ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದು, ಅರ್ಹ ಫಲಾನುಭವಿಗಳು ಯೋಜನೆಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ, ಕುಟುಂಬದ ಸದಸ್ಯರ ಫೊಟೊ ಬದಲಾವಣೆ, ಕುಟುಂಬದ ಮುಖ್ಯಸ್ಥರ ಬದಲಾವಣೆ ಸೇರಿ ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಯೋಜನೆಯಡಿ ಹೊಸದಾಗಿ ಅರ್ಜಿ ಹಾಕಲಾಗುವುದು. ಇದುವರೆಗೆ ಪಂಚ ಗ್ಯಾರಂಟಿ ಯೋಜನೆಗಳ ಉಪಯೋಗ ಪಡೆಯದಿರುವ ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳನ್ನು ನೀಡಿ ಯೋಜನೆಗಳನ್ನು ಸುದಪಯೋಗಪಡಿಸಿಕೊಳ್ಳಬಹುದಾಗಿದೆ.

ಅರ್ಹ ಫಲಾನುಭವಿಗಳು ಮುಳಗುಂದ ನಾಕಾ ಬಳಿಯ ಕೆಎಸ್‌ಆರ್‌ಟಿಸಿ ಡಿಪೋ ಎದುರಿನ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿರುವ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಗೆ ಜೂನ್ 14ರಂದು ಬೆಳಿಗ್ಗೆ 10ರಿಂದ ಸಂಜೆ 5ರೊಳಗಾಗಿ ಭೇಟಿ ನೀಡಬಹುದಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here