
ಗುಜರಾತ್:- ಗುರುವಾರ ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ದುರಂತ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ಭೇಟಿ ನೀಡಲಿದ್ದಾರೆ. ವಿಮಾನ ಪತನಗೊಂಡ ಸ್ಥಳಕ್ಕೆ ಮೋದಿ ಭೇಟಿ ನೀಡಲಿದ್ದು, ಅಧಿಕಾರಿಗಳಿಂದ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ, ಬದುಕುಳಿದ ಏಕೈಕ ಪ್ರಯಾಣಿಕನ ಆರೋಗ್ಯ ವಿಚಾರಿಸಲಿದ್ದಾರೆ.
ಪ್ರಧಾನಿ ಅವರು ಅಪಘಾತದಲ್ಲಿ ಮೃತಪಟ್ಟ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಗೆ ಅಂತಿಮ ನಮನ ಸಲ್ಲಿಸುವ ನಿರೀಕ್ಷೆಯಿದೆ. ಬಳಿಕ ಅವರು ಕೇಂದ್ರ ಮತ್ತು ರಾಜ್ಯ ನಾಯಕರು ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವ ನಿರೀಕ್ಷೆಯಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ಸಚಿವರಾದ ಮಿನ್ ರಾಮ್ ನಾಯಕ್, ಸಿ ಆರ್ ಪಾಟೀಲ್ ಅವರು ಪ್ರಧಾನಿ ಅವರೊಂದಿಗೆ ಆಗಮಿಸುವ ನಿರೀಕ್ಷೆಯಿದೆ.
ದುರಂತ ಆಗಿದ್ಹೇಗೆ?
ಜೂನ್ 12ರಂದು (ಗುರುವಾರ) ಅಹಮಾದಾಬಾದ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಮಧ್ಯಾಹ್ನ 13.38ಕ್ಕೆ ಅಹಮದಾಬಾದ್ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.
ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.