ವಿಜಯಸಾಕ್ಷಿ ಸುದ್ದಿ, ಗದಗ: ಕೆ.ಎಚ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಹುಲಕೋಟಿ ಹಾಗೂ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಹಯೋಗದಲ್ಲಿ, ಗದಗ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗ ಇವರ ಸಹಕಾರದಿಂದ, ಎಚ್.ಕೆ. ಪಾಟೀಲ ಸೇವಾ ತಂಡದ ಸಹಾಯದಿಂದ ಸೋಮವಾರ ಒಟ್ಟು 22 ಜನ ಫಲಾನುಭವಿಗಳಿಗೆ ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಹುಲಕೋಟಿಯ ಕೆ.ಎಚ್. ಪಾಟೀಲ ಆಸ್ಪತ್ರೆಯಲ್ಲಿ ನೆರವೇರಿಸಲಾಯಿತು.
ಸಂಸ್ಥೆಯ ಚೇರಮನ್ ಡಾ. ಎಸ್.ಆರ್. ನಾಗನೂರ ಹಾಗೂ ಗೌರವ ಕಾರ್ಯದರ್ಶಿ ಡಾ. ವೇಮನ್ ಆರ್.ಸಾವಕಾರ ಶಿಬಿರದಲ್ಲಿ ಉಪಸ್ಥಿತರಿದ್ದು ಮಾರ್ಗದರ್ಶನ ಮಾಡಿದರು. ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆಯನ್ನು ಎಂ.ಎಂ. ಜೋಶಿ ಆಸ್ಪತ್ರೆಯ ವೈದ್ಯರು ನಡೆಸಿದರು.
ಶಿಬಿರದಲ್ಲಿ ಕೆ.ಎಚ್. ಪಾಟೀಲ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡು ಸಹಾಯ-ಸಹಕಾರ ನೀಡಿ ಶಿಬಿರದ ಯಶಸ್ಸಿಗೆ ಶ್ರಮಿಸಿದರು.