ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ನಡೆದಾಡುವ ದೇವರು, ಅಂಧ-ಅನಾಥರ ಬಾಳಿನ ಆಶಾಕಿರಣ, ಮಹಾನ್ ಪವಾಡ ಪುರುಷರಾಗಿರುವ ಶ್ರೀ ಗಾನಯೋಗಿ ಪಂ. ಪುಟ್ಟರಾಜ ಗವಾಯಿಗಳವರ ಸ್ಮಾರಕ ಭವನ ಕಾಮಗಾರಿ ಸುಮಾರು 11 ವರ್ಷದಿಂದ ಸ್ಥಗಿತಗೊಂಡಿರುವುದು ಗವಾಯಿಗಳವರ ಭಕ್ತರ ಮನಸ್ಸಿಗೆ ನೋವನ್ನುಂಟುಮಾಡಿದೆ ಎಂದು ಕ್ರಾಂತಿ ಸೇನಾ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ ಹಬೀಬ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸುಮಾರು 11 ವರ್ಷಗಳಿಂದಲೂ ಕ್ರಾಂತಿ ಸೇನಾ ಗದಗ ಜಿಲ್ಲಾ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು, ಪಂಡಿತ್ ಪುಟ್ಟರಾಜ ಗವಾಯಿಗಳವರ ಭಕ್ತರ ವತಿಯಿಂದ ಸಾಕಷ್ಟು ಬಾರಿ ಹೋರಾಟ ನಡೆಸಿ ಗದಗ ಜಿಲ್ಲಾಧಿಕಾರಿಗಳಿಗೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಲಾಗಿದೆ. ಆದರೂ, ಈ ಸ್ಮಾರಕ ಭವನದ ಕಾಮಗಾರಿ ಪೂರ್ಣಗೊಂಡಿಲ್ಲ.
ಅರ್ಧಕ್ಕೆ ನಿಂತಿರುವ ಈ ಸ್ಮಾರಕ ಭವನ ಅನೈತಿಕ ಚಟುವಟಿಕೆಯ ತಾಣವಾಗಿದೆ. ಕಾರಣ, ಆದಷ್ಟು ಬೇಗ ಪಂ. ಪುಟ್ಟರಾಜ ಗವಾಯಿಗಳವರ ಸ್ಮಾರಕ ಭವನ ಕಾಮಗಾರಿ ಪೂರ್ಣಗೊಳಿಸಿ ಅವರ ಆಶೀರ್ವಾದಕ್ಕೆ ಪಾತ್ರರಾಗಬೇಕೆಂದು ಮನವಿ ಮಾಡಿದ್ದಾರೆ.