ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ವಿದ್ಯಾರ್ಥಿ ಜೀವನದಲ್ಲಿ ಪದವಿ ಹಂತವು ಅತ್ಯಮೂಲ್ಯವಾಗಿದ್ದು, ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಿದ್ಧತೆ ನಡೆಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಅವರು ಶುಕ್ರವಾರ ಶಿರಹಟ್ಟಿಯ ಶ್ರೀ ಜ.ಫ.ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ 2024-2025ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಅವಧಿಯಲ್ಲಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವುದಕ್ಕೆ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳನ್ನು ಗಳಿಸುವುದರ ಜೊತೆಗೆ ಉತ್ತಮ ಸಂಸ್ಕಾರವನ್ನು ಹೊಂದುವುದು ಅವಶ್ಯವಿದೆ. ಈ ಹಂತದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ನಿಮ್ಮ ತಂದೆ-ತಾಯಿ ಮತ್ತು ಗುರುವಿಗೆ ಕೀರ್ತಿ ತರುವಂತವರಾಗಿ ಹೊರಹೊಮ್ಮಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಉಮೇಶ ಅರಹುಣಸಿ, ಬಿಇಓ ಎಚ್.ಎನ್. ನಾಯ್ಕ, ಪ್ರೊ. ಪ್ರಕಾಶ ಹೊಸಮನಿ, ಡಾ. ಎಲ್.ಟಿ. ನಾಯಕ, ಕೆ.ಎ. ಬಳಿಗೇರ, ಎಚ್.ಎಂ. ದೇವಗಿರಿ, ಸಿ.ಸಿ. ನೂರಶೆಟ್ಟರ, ಫಕ್ಕೀರೇಶ ರಟ್ಟಿಹಳ್ಳಿ, ಸಂದೀಪ ಕಪ್ಪತ್ತನವರ, ಅಶೋಕ ವರವಿ, ನಂದಾ ಪಲ್ಲೇದ, ನಂದಾ ಕಪ್ಪತ್ತನವರ, ಮಂಜುನಾಥ ಸೊಂಟನೂರ ಮುಂತಾದವರು ಉಪಸ್ಥಿತರಿದ್ದರು.