ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತೊಮ್ಮೆ ರಾಜ್ಯದ ಜನರ ಮುಂದೆ ಸಾಬೀತಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎನ್ನುವುದಕ್ಕೆ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ತಮ್ಮದೇ ಸರ್ಕಾರದ ವಿರುದ್ಧ ಮಾಡಿರುವ ಆರೋಪವೇ ಸಾಕ್ಷಿಯಾಗಿದೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಸತಿ ಇಲಾಖೆಯಲ್ಲಿ ಹಣ ಇಲ್ಲದಿದ್ದರೆ ಅಲ್ಲಿ ಏನೇನೂ ಆಗುವುದಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಮುಖವಾಡ ರಾಜ್ಯದ ಜನತೆಯ ಮುಂದೆ ಅನಾವರಣವಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಕಾಂಗ್ರೆಸ್ ಶಾಸಕ ರಾಯರೆಡ್ಡಿ ನೀಡಿದ್ದ ಹೇಳಿಕೆಗೆ ನಿಜವಾಗಿದೆ. ವಸತಿ ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಸರಫರಾಜ್ಗೆ ಕರೆ ಮಾಡಿ, 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಪಟ್ಟಿ ಸಮೇತ ವಿವರಿಸಿದ್ದಾರಲ್ಲದೆ, ಈ ಮಾಹಿತಿ ಬಹಿರಂಗವಾದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದಾರೆ.
ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಆಡಳಿತ ಪಕ್ಷದ ಶಾಸಕರು ಹೇಳಿರುವ ಮಾತುಗಳೇ ಸಾಕ್ಷಿ. ಸ್ವಪಕ್ಷದ ಶಾಸಕರೇ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ಖಾನ್ಗೆ ಸ್ಥಾನದಲ್ಲಿ ಮುಂದುವರೆಯುವ ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ತೋಟಪ್ಪ(ರಾಜು) ಕುರುಡಗಿ ಆಗ್ರಹಿಸಿದ್ದಾರೆ.