ಕಾರವಾರ:- ವಿಶ್ವ ಪ್ರಸಿದ್ಧ ಪ್ರವಾಸಿ ತಾಣ, ಭಟ್ಕಳದ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಮುರುಡೇಶ್ವರದ ಶಿವ ದೇವಸ್ಥಾನದ ದರ್ಶನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕು’ ಎಂದು ದೇವಸ್ಥಾನದ ವತಿಯಿಂದ ಭಾನುವಾರ ಸೂಚನೆ ಹೊರಡಿಸಲಾಗಿದೆ. ಮುರುಡೇಶ್ವರ ಪ್ರಸಿದ್ಧ ಪ್ರವಾಸಿ ಸ್ಥಳವಾಗಿದ್ದು, ಲಕ್ಷಾಂತರ ಜನ ಪ್ರವಾಸಿಗರು ಮುರುಡೇಶ್ವರಕ್ಕೆ ಭೇಟಿ ನೀಡುತ್ತಾರೆ. ಇಲ್ಲಿನ ಜಲಸಾಹಸ ಕ್ರೀಡೆ, ಸ್ಕೂಬಾ ಡೈವ್ಗಳು ಪ್ರಸಿದ್ಧವಾಗಿದ್ದು, ಬೃಹತ್ ಶಿವನ ಮೂರ್ತಿ ವಿಶ್ವ ಪ್ರಸಿದ್ಧಿ ಪಡೆದಿದೆ.
ಇಲ್ಲಿಗೆ ಬರುವ ಪ್ರವಾಸಿಗರು ಕಡಲ ತೀರಕ್ಕೆ ಭೇಟಿ ನೀಡಿದ ನಂತರ ಶಿವನ ದೇವಾಲಯಕ್ಕೂ ಭೇಟಿ ಕೊಡುತ್ತಾರೆ. ಈ ವೇಳೆ ಪುರುಷರು ಚಡ್ಡಿ, ಬನಿಯನ್ನಲ್ಲಿ ಬಂದರೆ, ಮಹಿಳೆಯರು ಸಹ ಧಾರ್ಮಿಕ ಸ್ಥಳದಲ್ಲಿ ಧರಿಸಬೇಕಾದ ವಸ್ತ್ರ ಧರಿಸದೇ ಆಕ್ಷೇಪಾರ್ಹ ರೀತಿಯಲ್ಲಿ ದೇವರ ದರ್ಶನಕ್ಕೆ ಬರುತಿದ್ದರು. ಆಸ್ತಿಕ ಭಕ್ತರು ಈ ಬಗ್ಗೆ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿ ತರುವಂತೆ ಮನವಿ ಮಾಡಿದ್ದರು. ಈಗ ಆಡಳಿತ ಮಂಡಳಿ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಪುರುಷರಿಗೆ ಪಂಚೆ ಮತ್ತು ಮಹಿಳೆಯರಿಗೆ ಸೀರೆ, ಚೂಡಿದಾರ ಧರಿಸಿದರೆ ಮಾತ್ರ ದೇವಾಲಯಕ್ಕೆ ಪ್ರವೇಶ ಕಲ್ಪಿಸಲಿದೆ. ದೇವಾಲಯದ ಎದುರುಭಾಗ ಸೂಚನ ಫಲಕ ಹಾಕಲಾಗಿದ್ದು, ಯಾವ ವಸ್ತ್ರ ಧರಿಸಬೇಕು ಎಂದು ಫಲಕದಲ್ಲಿ ನಮೂದಿಸಲಾಗಿದೆ.