ಹಿಂದಿಯ ಜನಪ್ರಿಯ ಧಾರಾವಾಹಿ ‘ಅನುಪಮಾ’ ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ಮುಂಜಾನೆ ಮುಂಬೈನ ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಸಿಟಿಯಲ್ಲಿ ಅನುಪಮಾ ಧಾರವಾಹಿಯ ಶೂಟಿಂಗ್ ನಡೆಯುತ್ತಿದ್ದು ಈ ವೇಳೆ ಬೆಂಕಿ ಅವಘಡ ನಡೆದಿದೆ. ಪ್ರಾಥಮಿಕ ಮಾಹಿತಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಮುಂಜಾನೆ ಚಿತ್ರೀಕರಣ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚು ಜನ ಶೂಟಿಂಗ್ ಸ್ಥಳದಲ್ಲಿ ಇರಲಿಲ್ಲ. ಹೀಗಾಗಿ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಯಲ್ಲಿ ಇಡೀ ಶೂಟಿಂಗ್ ಸೆಟ್ ಗೆ ಬೆಂಕಿ ಹತ್ತಿಕೊಂಡಿದ್ದು ಸದ್ಯ ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
‘ಅನುಪಮಾ’ ಧಾರಾವಾಹಿ ನಿರ್ಮಾಪಕರು ಮತ್ತು ವಾಹಿನಿಯವರು ಸೂಕ್ತ ಭದ್ರತಾ ಕ್ರಮ ತೆಗೆದುಕೊಳ್ಳದೇ ಇರುವುದೇ ಈ ಅವಘಡಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಅಖಿಲ ಭಾರತ ಸಿನಿಮಾ ಕಾರ್ಮಿಕರ ಒಕ್ಕೂಟವು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಧಾರವಾಹಿ ನಿರ್ಮಾಪಕರು ಹಾಗೂ ವಾಹಿನಿಯವರ ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದೆ. ಹಾಗಾಗಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಖಿಲ ಭಾರತ ಸಿನಿಮಾ ಕಾರ್ಮಿಕರ ಒಕ್ಕೂಟ ಒತ್ತಾಯಿಸಿದೆ.
‘ಈ ಅಗ್ನಿ ಅನಾಹುತದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ಫಿಲ್ಮ್ ಸಿಟಿಯ ಮ್ಯಾನೇಜಿಂಗ್ ಡೈರೆಕ್ಟರ್ ಅಮಾನತು ಮಾಡಬೇಕು. ನಿರ್ಮಾಪಕರು ಕಾರ್ಮಿಕರ ಸುರಕ್ಷತೆಗೆ ಬದ್ಧರಾಗಿಲ್ಲ. ಇದರಿಂದ ಸಾವಿರಾರು ಕಾರ್ಮಿಕರನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆ’ ಎಂದು ಅಖಿಲ ಭಾರತ ಸಿನಿಮಾ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಸುರೇಶ್ ಶ್ಯಾಮ್ಲಾಲ್ ಗುಪ್ತಾ ಹೇಳಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಧಾರಾವಾಹಿ ತಂಡ ಅಗ್ನಿ ಅವಘಡದಿಂದ ಯಾರಿಗೂ ತೊಂದರೆ ಆಗಿಲ್ಲ ಎಂದು ತಿಳಿಸಿದೆ.