ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸಿಇಓ ಭುವನೇಶ ಪಾಟೀಲ ಅವರು ಸೋಮವಾರ ಮಧ್ಯಾಹ್ನದಿಂದ ಸಂಜೆಯವರೆಗೆ ಧಾರವಾಡ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಭೇಟಿ ನೀಡಿ, ಕಾರ್ಯನಿರ್ವಹಣೆಯ ಕುರಿತು ಪರಿಶೀಲಿಸಿದರು.
ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ನೂತನ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿ, ಮಂಜೂರಾತಿ ನೀಡಿದ ನೀಲನಕ್ಷೆಯ ಪ್ರಕಾರ ಹಾಗೂ ಬಿಡುಗಡೆಯಾದ ಅನುದಾನಕ್ಕೆ ಅನುಗುಣವಾಗಿ ಪ್ರಗತಿ ಸಾಧಿಸಿರುವ ಕುರಿತು ಮಾಹಿತಿ ಪಡೆದುಕೊಂಡರು.
ನಂತರ ಅವರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಆಹಾರ ದಾಖಲೆಗಳ ಪರಿಶೀಲನೆ ಮಾಡಿದರು. ಮಕ್ಕಳಿಗೆ ನೀಡುವ ಆಹಾರ ಸಾಮಗ್ರಿಗಳನ್ನು ಪರೀಕ್ಷಿಸಿದರು. ಅಂಗನವಾಡಿಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಹಾಗೂ ಆಹಾರ ಸಾಮಗ್ರಿಗಳನ್ನು ಪರೀಕ್ಷಿಸಿ, ಯಾವುದೇ ಹುಳು, ಕಸ-ಕಡ್ಡಿ ಇರದಂತೆ ನೋಡಿ ಮಕ್ಕಳಿಗೆ ನೀಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಸುರಕ್ಷತೆಯ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಎಚ್ಚರಿಕೆ ನೀಡಿದರು.
ನಂತರ ಅವರು ತಡಕೋಡ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಭೇಟಿ ನೀಡಿ, ಕೋಲ್ ಇಂಡಿಯಾ ಕಂಪನಿಯ ಸಿಎಸ್ಆರ್ ನಿಧಿಯಲ್ಲಿ ನಿರ್ಮಾಣವಾಗುತ್ತಿರುವ ಎರಡು ಶಾಲಾ ಕೊಠಡಿಗಳನ್ನು ವೀಕ್ಷಿಸಿದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಿಸಿರುವ ರಾಶಿ ವನ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ, ಉಪನಿರ್ದೇಶಕರ ಕಾರ್ಯಾಲಯದ ಶಿಕ್ಷಣಾಧಿಕಾರಿ ಪ್ರಭಯ್ಯ ಕೆ. ಚಿಕ್ಕಮಠ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮುಮ್ಮಿಗಟ್ಟಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಸಿಇಓ ಭುವನೇಶ ಪಾಟೀಲ, ಕಚೇರಿಯಲ್ಲಿನ ಕಡತಗಳ ನಿರ್ವಹಣೆ ಹಾಗೂ ಕಚೇರಿ ಸ್ವಚ್ಛತೆ, ಮೂಲ ಸೌಲಭ್ಯಗಳನ್ನು ಪರಿಶೀಲಿಸಿದರು. ಗರಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ವೈದ್ಯರ ಹಾಜರಾತಿ ಪರಿಶೀಲಿಸಿದರು. ರೋಗಿಗಳು, ಅವರ ಸಂಬAಧಿಕರಿAದ ಆಸ್ಪತ್ರೆಯ ಸೌಲಭ್ಯಗಳು, ಸಿಬ್ಬಂದಿಗಳ ಸ್ಪಂದನೆ ಕುರಿತು ಮಾಹಿತಿ ಪಡೆದರು.