ಹಾವೇರಿ:- ಹಾವೇರಿಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದ್ದ ಗುತ್ತಿಗೆದಾರ ಶಿವಾನಂದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಕೊಲೆ ಆರೋಪಿಗಳ ಪೈಕಿ ಒಬ್ಬನಾದ ನಾಗರಾಜ್ ಸವದತ್ತಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಕೊಲೆ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುವ ಸುಳಿವು ದೊರೆತಿದೆ. ಹತ್ಯೆಯ ಪ್ರತೀಕಾರ ತೀರಿಸಿಕೊಳ್ಳಲು ಮುಂದಾದ ಶಿವಾನಂದ ಕುನ್ನೂರು ಸಂಬಂಧಿಕರು ಕೊಲೆ ಆರೋಪಿಗಳ ಪೈಕಿ ಒಬ್ಬನಾದ ನಾಗರಾಜ್ ಸವದತ್ತಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್, ಕೊಲೆ ಪ್ರಕರಣ ಎ-1 ಆರೋಪಿಯಾಗಿರುವ ನಾಗರಾಜ್ ಸವದತ್ತಿ ಮನೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಇದರಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಈ ಘಟನೆ ನಡೆದಿದೆ. ಇದರಿಂದ ಆರೋಪಿಯ ಮನೆಯ ಸದಸ್ಯರು ಬಚಾವ್ ಆಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಶಿಗ್ಗಾಂವಿಯಲ್ಲಿ ಪೊಲೀಸ್ ಬಿಗಿಭದ್ರತೆ ಕಲ್ಪಿಸಲಾಗಿದೆ. 5 ಜನ ಸಿಪಿಐ, 7 ಪಿಎಸ್ಐ , 2 ಡಿ.ಆರ್. ವಾಹನ ಸೇರಿದಂತೆ 20 ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪೊಲೀಸರು ಮೂರು ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಸದ್ಯ, ಹತ್ಯೆಯಾದ ಶಿವಾನಂದ ಕುನ್ನೂರ ಪತ್ನಿ ನಾಗರತ್ನಾ ಪೊಲೀಸರಿಗೆ ದೂರು ನೀಡಿದ್ದು, ಇದರ ಆಧಾರದಲ್ಲಿ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಆಧರಿಸಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆಬೀಸಿದ್ದಾರೆ. ಗುತ್ತಿಗೆದಾರನ ಹತ್ಯೆಯಿಂದ ಶಿಗ್ಗಾವಿಯು ಬೂದಿ ಮುಚ್ಚಿದ ಕೆಂಡದಂತಾಗಿದೆ.
ಘಟನೆ ವಿವರ:
40 ವರ್ಷದ ಗುತ್ತಿಗೆದಾರ ಶಿವಾನಂದ ಕುನ್ನೂರು ಎಂಬವರನ್ನು ಜೂನ್ 24ರ ಮಂಗಳವಾರ ಹಾಡಹಗಲೇ ಮಾರಕಾಸ್ತ್ರಗಳಿಂದ ಹೊಡೆದು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಹತ್ಯೆಗೆ ಆರೋಪಿ ನಾಗರಾಜ್ ಸಂಚು ರೂಪಿಸಿದ್ದ ಎನ್ನಲಾಗಿದೆ. ಸ್ಥಳೀಯರು ಕೃತ್ಯದ ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವಿಡಿಯೋದಲ್ಲಿ ನಾಗರಾಜ್ ಸವದತ್ತಿ, ಹನುಮಂತ, ಅಶ್ರಪ್, ಸುದೀಪ್ ಮತ್ತು ಸುರೇಶ್ ಹತ್ಯೆ ಮಾಡಿರುವುದು ಸೆರೆಯಾಗಿತ್ತು. ಹತ್ಯೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆಸ್ತಿ ವಿಚಾರದಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಈ ಐವರ ವಿರುದ್ಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.