ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ 1,622 ಅಂಗನವಾಡಿ ಕೇಂದ್ರಗಳಲ್ಲಿ ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನದೊಂದಿಗೆ ಪೌಷ್ಠಿಕ ಆಹಾರ ಅಭಿಯಾನದ ಬಗ್ಗೆಯೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಬುಧವಾರ ಬೆಳಿಗ್ಗೆ ಧಾರವಾಡ ರಾಜೀವ ಗಾಂಧಿ ನಗರದ ಆತ್ಮಾನಂದ ಸಮುದಾಯ ಭವನದಲ್ಲಿ ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜೂನ್ 16ರಿಂದ ಜುಲೈ 31ರವರೆಗೆ ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನವನ್ನು ಪ್ರಾರಂಭಿಸಿದ್ದು, ಹುಟ್ಟಿದ ಮಗುವಿನಿಂದ ಹಿಡಿದು ಆರು ವರ್ಷದವರೆಗಿನ ಮಕ್ಕಳಿಗೆ ತೀವ್ರತರ ಅತಿಸಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ಅಭಿಯಾನವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಅಂಗನವಾಡಿ ಸೌಲಭ್ಯಗಳನ್ನು ಎಲ್ಲರಿಗೂ ತಲುಪಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮನೆಮನೆಗೆ ಭೇಟಿ ನೀಡಿ ಮಕ್ಕಳ ಮಾಹಿತಿ, ಅವರ ಬೆಳವಣಿಗೆ ಬಗ್ಗೆ ಗಮನಹರಿಸಬೇಕು. ಮಕ್ಕಳಲ್ಲಿ ಅಸಮಾನತೆ ಬೇಡ. ಎಲ್ಲರನ್ನು ಒಂದಾಗಿ ಕಾಣಬೇಕು ಎಂದು ತಿಳಿಸಿದರು
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಸರ್ಕಾರದಿಂದ ಬಂದಿರುವ ಪೋಷಕಾಂಶವುಳ್ಳ ಆಹಾರವನ್ನು ಸರಿಯಾದ ಪ್ರಮಾಣದಲ್ಲಿ ಮಕ್ಕಳಿಗೆ ಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕಿ ಡಾ.ಎಚ್.ಎಚ್. ಕುಕನೂರ, ಜಿಲ್ಲಾ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ಲಕ್ಷ್ಮೀ ಹಿಂಡಸಗೇರಿ, ಅಶೋಕ ತುರಾಯಿದಾರ, ಮಹೇಶ ಕುಲಗಪ್ಪನವರ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಇದು ತಾಯಂದಿರಿಗೆ ಜಾಗೃತಿ ಕಾರ್ಯಕ್ರಮ ಆಗಿದೆ. ತಾಯಿ-ಮಗುವಿನ ಮಧ್ಯ ಅವಿನಾಭಾವ ಸಂಬಂಧವಿದೆ. ಮಗುವಿಗೆ ಎದೆ ಹಾಲು ಮಹತ್ವದ್ದಾಗಿದೆ. ತಾಯಂದಿರು ಮಗು ಜನಿಸಿದ ಕನಿಷ್ಠ ಆರು ತಿಂಗಳು ಎದೆ ಹಾಲು ಉಣಿಸಬೇಕು. ಎದೆ ಹಾಲಿಗೆ ಪರ್ಯಾಯ ಆಹಾರವಿಲ್ಲ. ಇಂತದಕ್ಕೆ ಸೌಂದರ್ಯ ಪ್ರಜ್ಞೆ, ಆಧುನಿಕ ಜೀವನ ಶೈಲಿ ಅಡ್ಡ ಬರಬಾರದು ಎಂದು ಡಿಸಿ ದಿವ್ಯ ಪ್ರಭು ಹೇಳಿದರು.