ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಹೈಕಮಾಂಡ್ ವಿಶ್ವಾಸ ಇರುವವರೆಗೂ ನಾನು ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದು, ಪರೋಕ್ಷವಾಗಿ ರಾಜೀನಾಮೆಗೆ ಮುಂದಾಗಿದ್ದಾರೆಯೇ? ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟಿದೆ. ನನಗೆ ಎಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರೆಯುವಂತೆ ಸೂಚಿಸುತ್ತಾರೆಯೋ ಅಲ್ಲಿಯವರೆಗೆ ನಾನು ಅಧಿಕಾರದಲ್ಲಿ ಇರುತ್ತೇನೆ. ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ, ಕೂಡಲೇ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ರಾಜೀನಾಮೆ ನೀಡಿದರೂ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಸದ್ಯ ಹೈಕಮಾಂಡ್ ಗೆ ನನ್ನ ಮೇಲೆ ವಿಶ್ವಾಸವಿದೆ. ಪರ್ಯಾಯ ನಾಯಕ ಇಲ್ಲವೆಂಬ ಮಾತನ್ನು ನಾನು ಒಪ್ಪಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಮೇಲಿನವರಿಗೆ ವಿಶ್ವಾಸ ಇರುವವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಸಿಎಂ ಅವರ ಮಾತು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದ್ದು, ಸಿಎಂ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆಯೇ? ಅಲ್ಲದೇ, ಹೈಕಮಾಂಡ್ ಈ ಕುರಿತು ಸೂಚನೆ ನೀಡಿದೆಯೇ? ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಸತ್ಯಾಂಶ ಇನ್ನಷ್ಟೇ ದಿನಗಳಲ್ಲಿ ತಿಳಿದು ಬರಲಿದೆ.