ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಆಡಳಿತ ಮಂಡಳಿಗೆ ನಡೆಯಬೇಕಾಗಿರುವ ಚುನಾವಣೆ ಪ್ರಕ್ರಿಯೆಯನ್ನು ಅನವಶ್ಯಕವಾಗಿ ವಿಳಂಬಗೊಳಿಸಲಾಗುತ್ತಿದೆ. ಶಿಕ್ಷಣ ಮತ್ತು ಸಮುದಾಯ ಸೇವೆಯಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಇಂತಹ ಮಹತ್ವದ ಸಂಸ್ಥೆಯ ಆಡಳಿತಾತ್ಮಕ ಶಿಷ್ಟಾಚಾರಗಳನ್ನು ಹಾಗೂ ಬದ್ಧತೆಯನ್ನು ದಿಕ್ಕು ತಪ್ಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದನ್ನು ಎಸ್ಡಿಪಿಐ ಗದಗ ಜಿಲ್ಲಾಧ್ಯಕ್ಷ ಬಿಲಾಲ ಗೋಕಾವಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಾವುದೇ ಸ್ಥಳೀಯ ರಾಜಕೀಯ ವ್ಯಕ್ತಿಗಳ ಅಥವಾ ರಾಜಕಾರಣಿಗಳ ಬಾಹ್ಯ ಒತ್ತಡಗಳ ಅಡಿಯಲ್ಲಿ ನಿರ್ಧಾರಗಳನ್ನು ಕೈಗೊಳ್ಳದೆ, ಸಂಪೂರ್ಣ ನ್ಯಾಯಸಮ್ಮತ, ಪಾರದರ್ಶಕ ಮತ್ತು ಸಮಯಬದ್ಧವಾಗಿ ಚುನಾವಣೆ ಪ್ರಕ್ರಿಯೆಯನ್ನು ನಡೆಸಬೇಕು.
ಸ್ಥಳೀಯ ಸಮುದಾಯದ ನಂಬಿಕೆ ಮತ್ತು ವಿಶ್ವಾಸ ಉಳಿಸಿಕೊಳ್ಳಬೇಕಾದದ್ದು ಸಂಬಂಧಿತ ಆಡಳಿತ ಮತ್ತು ಚುನಾವಣೆ ಅಧಿಕಾರಿಗಳ ನೈತಿಕ ಜವಾಬ್ದಾರಿಯಾಗಿದೆ. ಸಮುದಾಯದ ಭವಿಷ್ಯಕ್ಕೆ ರೂಪಕೊಡುವಂತಹ ಪಾರದರ್ಶಕ ಚುನಾವಣಾ ಪ್ರಕ್ರಿಯೆಗೆ ಶೀಘ್ರದಲ್ಲಿ ಚಾಲನೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.