ಬೆಂಗಳೂರು – ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಕನಸನ್ನು ಮೋದಿ ನನಸು ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನವೇ ಒಂದು ಸಂದೇಶ. ಅವರ ಚಿಂತನೆಗಳಿಂದ ಇಂದು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಧೈರ್ಯವಂತರಾಗಿ ದೇಶ ಮೊದಲು ಎಂಬ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ. ಡಾ. ಮುಖರ್ಜಿ ಅವರು ದೇಶದ ಏಕತೆ, ಸಮಗ್ರತೆ, ಸಾಂಸ್ಕೃತಿಕ ಹಿರಿಮೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶ್ರೇಷ್ಠ ರಾಷ್ಟ್ರೀಯ ನಾಯಕ ಎಂದು ತಿಳಿಸಿದರು.
ನಮ್ಮ ಪಕ್ಷಕ್ಕೆ ಸೈದ್ಧಾಂತಿಕ ಅಡಿಪಾಯ ಹಾಕಿ ಕೊಟ್ಟ ಭಾರತೀಯ ಜನಸಂಘದ ಸ್ಥಾಪಕರು. ದೇಶದ ರಾಜಕಾರಣದಲ್ಲಿ ಒಂದು ಬಲಿಷ್ಠ ರಾಷ್ಟ್ರೀಯವಾದಿ ಸಿದ್ಧಾಂತ ಇರುವ ರಾಜಕೀಯ ಪರಿವಾರಕ್ಕೆ ನಾಂದಿ ಹಾಡಿದವರು. 370ನೇ ವಿಧಿಯನ್ನು ವಿರೋಧಿಸಿ ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ಒಗ್ಗೂಡಿಸಲು ಗಟ್ಟಿಯಾಗಿ ನಿಂತು, ಅದಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ ಧೀಮಂತ ನಾಯಕ ಎಂದು ಯಡಿಯೂರಪ್ಪ ನೆನಪಿಸಿದರು.