ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಉತ್ತಮ ಶಿಕ್ಷಣ ಪ್ರತಿಯೊಬ್ಬರಿಗೂ ದೊರಕುವಂತಾಗಬೇಕು. ಗ್ರಾಮೀಣ ಭಾಗದ ಮಕ್ಕಳು ನಗರ ಪ್ರದೇಶಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡುವ ಬದಲು ಆಯಾ ಗ್ರಾಮದಲ್ಲಿಯೇ ಗುಣಮಟ್ಟದ ಶಿಕ್ಷಣ ಪಡೇಯಬೇಕು ಎನ್ನುವ ಉದ್ದೇಶ ಹೊಂದಲಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಸೋಮವಾರ ಸಮೀಪದ ಆದ್ರಳ್ಳಿ ಗ್ರಾಮದ ಪ್ರಾಥಮಿಕ ಶಾಲಾ ಕೊಠಡಿಗಳ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಆದರಹಳ್ಳಿ ಗ್ರಾಮದ ಪಿಎಂ ಶ್ರೀ ಯೋಜನೆ ಅಡಿಯಲ್ಲಿ ಈಗ ನಾಲ್ಕು ಕೊಠಡಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ನಾಲ್ಕು ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಆಗಲಿದೆ. ಗ್ರಾಮದ ಮಕ್ಕಳು ಶಿಕ್ಷಣ ಪಡೆಯುವ ಸಲುವಾಗಿ ಊರನ್ನು ಬಿಟ್ಟು ಬೇರೆ ಹೋಗಬಾರದು ಎಂಬ ಉದ್ದೇಶದಿಂದ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಆರಂಭಿಸಲಾಗಿದೆ ಎಂದು ತಿಳಿಸಿದರು.
ಬಿಇಒ ಎಚ್.ಎನ್. ನಾಯಕ ಮಾತನಾಡಿ, ಆದರಹಳ್ಳಿ ಗ್ರಾಮದ ಶಾಲೆಯಲ್ಲಿ 600ಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಇದು ಇಡೀ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಮಕ್ಕಳನ್ನು ಹೊಂದಿರುವ ಸರ್ಕಾರಿ ಶಾಲೆ ಎಂಬ ಕೀರ್ತಿಗೆ ಭಾಜನವಾಗಿದೆ. ಇಂಥ ಶಾಲೆಯ ಸರ್ವಾಂಗೀಣ ಪ್ರಗತಿಗೆ ಎಲ್ಲರೂ ಕೈ ಜೋಡಿಸಬೇಕಾದ ಅಗತ್ಯ ಇದೆ. ಇದು ಊರಿನ ಶಾಲೆ, ಇದನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಗ್ರಾಮಸ್ಥರು ಸಹಕರಿಸುವಂತೆ ಮನವಿ ಮಾಡಿದರು.
ಗ್ರಾ.ಪಂ ಸದಸ್ಯ ಶೇಕಪ್ಪ ಲಮಾಣಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ರಮೇಶ ಹೆಗ್ಗಣ್ಣವರ, ಗಣೇಶ ಲಮಾಣಿ, ಅನೂಷಾ ಲಮಾಣಿ, ಚಂದ್ರಕಾಂತ ಲಮಾಣಿ, ಅಕ್ಕವ್ವ ನಾಯಕ, ಶೀಲಾಬಾಯಿ ಲಮಾಣಿ, ತಿಪ್ಪವ್ವ ಲಮಾಣಿ, ಮಹಾಂತೇಶಗೌಡ ಪಾಟೀಲ, ಹಾಲಪ್ಪ ಸೂರಣಗಿ, ಉಮೇಶ ನಾಯಕ, ಜಾನು ಲಮಾಣಿ, ಲೋಕೋಪಯೋಗಿ ಇಲಾಖೆ ಎಇಇ ಫಕ್ಕೀರೇಶ ತಿಮ್ಮಾಪುರ, ಕೆಲವಡಿ, ಪಿಡಿಒ ಡಿ.ಡಿ. ಹಂದಿಗನೂರ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಕಾಂತ ನಂದೆಣ್ಣವರ, ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಹರೀಶ ಸೇರಿದಂತೆ ಮತ್ತಿತರರು ಇದ್ದರು.
ಇದೇ ಸಂದರ್ಭದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರು ಎಲ್ಕೆಜಿ ಮತ್ತು ಯುಕೆಜಿ ತರಗತಿ ಮತ್ತು ನೂತನ ಶೌಚಾಲಯಗಳನ್ನು ಉದ್ಘಾಟಿಸಿದರು.
ಶಾಲೆ ಆವರಣದಲ್ಲಿ ಅತಿಕ್ರಮಣ ಮಾಡಿಕೊಂಡಿರುವವರನ್ನು ತೆರವುಗೊಳಿಸಲು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಮುಂದಾಬೇಕು. ಸರ್ವೆ ಮಾಡಿಸಿ ಅತಿಕ್ರಮಣಗೊಂಡ ಜಾಗೆಯನ್ನು ಶಾಲೆಗೆ ಪಡೆದುಕೊಳ್ಳಬೇಕು. ಈ ಕಾರ್ಯಕ್ಕೆ ಗ್ರಾಮಸ್ಥರ ಸಹಕಾರ ಬಹಳ ಮುಖ್ಯ. ಎಲ್ಲರೂ ಸೇರಿ ಆದರಹಳ್ಳಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಶ್ರಮಿಸೋಣ. ಶಾಲೆಗೆ ಇರುವ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಡಾ. ಚಂದ್ರು ಲಮಾಣಿ ತಿಳಿಸಿದರು.