ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ನಿತ್ಯ ನೂರಾರು ಸಂಖ್ಯೆಯಲ್ಲಿ ಬರುವ ಪ್ರಯಾಣಿಕರಿಗೆ ಬಸ್ ನಿಲ್ದಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಬಸ್ ನಿಲ್ದಾಣ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ಅವರು ಪಟ್ಟಣದಲ್ಲಿ ಶುಕ್ರವಾರ ಜರುಗಿದ ಪಂಚ ಗ್ಯಾರಂಟಿ ಯೋಜನೆಗಳ ಜನಸಂಪರ್ಕ ಸಮಾರಂಭದಲ್ಲಿ ಪಾಲ್ಗೊಂಡು ನಂತರ ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಹಲವಾರು ಸೌಲಭ್ಯಗಳಿಲ್ಲದೆ ಜನರು ಪರದಾಡುತ್ತಿದ್ದಾರೆ. ಪ್ರಯಾಣಿಕರು ಕುಳಿತುಕೊಳ್ಳುವ ಆಸನದ ಸಮರ್ಪಕ ವ್ಯವಸ್ಥೆಯಾಗಬೇಕು ಎಂದರು. ಇದೇ ವೇಳೆ ಶೌಚಾಲಯ ನಿರ್ವಹಣೆ ಮಾಡುವವರು ಪ್ರಯಾಣಿಕರಿಂದ 2 ರೂಗಳ ಬದಲು 10 ರೂ ಪಡೆಯುತ್ತಿರುವ ಕುರಿತು ಪ್ರಯಾಣಿಕರು ಆರೋಪಿಸಿದರು. ಕೂಡಲೇ ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ಘಟಕ ವ್ಯವಸ್ಥಾಪಕರಿಗೆ ಸೂಚಿಸಿದರಲ್ಲದೆ, ಸಾರ್ವಜನಿಕರಿಂದ ದೂರುಗಳು ಬರದಂತೆ ನಿಲ್ದಾಣದಲ್ಲಿ ಸ್ವಚ್ಛತೆ, ಸೌಲಭ್ಯಗಳನ್ನು ನೀಡುವಂತೆ ತಿಳಿಸಿದರು.
ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ, ರಾಮಣ್ಣ ಲಮಾಣಿ (ಶಿಗ್ಲಿ ) ಗೀತಾ ಬೀರಣ್ಣವರ, ತಿಪ್ಪಣ್ಣ ಸಂಶಿ, ವಿಜಯ ಹಳ್ಳಿ, ಶಿವರಾಜಗೌಡ ಪಾಟೀಲ, ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ದೇವರಾಜ, ಘಟಕ ವ್ಯವಸ್ಥಾಪಕಿ ಸವಿತಾ ಆದಿ ಸೇರಿದಂತೆ ಅನೇಕರು ಇದ್ದರು.