ಬಡತನ ಮುಕ್ತ ಸಮಾಜಕ್ಕಾಗಿ ದಿಟ್ಟ ಹೆಜ್ಜೆ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ ವಿವಿಧ ಯೋಜನೆಗಳ ಮೂಲಕ 5 ಸಾವಿರ ರೂ ನೀಡುತ್ತಿದ್ದು, ಶೇ. 99ರಷ್ಟು ಅರ್ಹ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಬಡತನ ಮುಕ್ತ ಹಾಗೂ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷ ದಿಟ್ಟ ಹೆಜ್ಜೆಯನ್ನು ಇಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

Advertisement

ಅವರು ಮಂಗಳವಾರ ಶಿರಹಟ್ಟಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶಿರಹಟ್ಟಿಯ ತಾಲೂಕು ಆಸ್ಪತ್ರೆಯ ನೂತನ ಕಟ್ಟಡದ ಅಡಿಗಲ್ಲು ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚೆಗೆ ಗೃಹ ಆರೋಗ್ಯ ಯೋಜನೆಯನ್ನು ಸಹ ಜಾರಿಗೊಳಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನತೆಯ ಆರೋಗ್ಯದ ದೃಷ್ಟಿಯಿಂದ ಈ ಯೋಜನೆ ಅನುಕೂಲಕರವಾಗಲಿದೆ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಅವಶ್ಯವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣಕ್ಕೆ ಸಚಿವ ದಿನೇಶ ಗುಂಡೂರಾವ್ ಅವರು ಮುಂದಾಗಬೇಕೆಂದು ಹೇಳಿದರು.

ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ಸರಕಾರ ರಚನೆಯಾಗಿ 4 ತಿಂಗಳಲ್ಲೇ ನೀಡಿದ ಭರವಸೆಗಳನ್ನು ಈಡೇರಿಸಲಾಗಿದೆ. ಇದರಿಂದ ಸಮಾಜದಲ್ಲಿ ಬದಲಾವಣೆಯಾಗುತ್ತದೆ. ಗೃಹ ಆರೋಗ್ಯ ಯೋಜನೆಯ ಮೂಲಕ ಬಿಪಿ, ಶುಗರ್‌ನಂತಹ ರೋಗಳನ್ನು ಪತ್ತೆ ಹಚ್ಚಿ ತಪಾಸಣೆ ನಡೆಸಿ ಅವರಿಗೆ ಔಷಧೋಪಚಾರ ಮಾಡಲಾಗುತ್ತಿದೆ. ಪ್ರತಿ ತಾಲೂಕಾ ಆಸ್ಪತ್ರೆಯಲ್ಲೂ ಸ್ತ್ರೀರೋಗ, ಮಕ್ಕಳ ಮತ್ತು ಅರವಳಿಕೆ ತಜ್ಞರನ್ನು ನಿಯೋಜಿಸಿ ಜನತೆಗೆ 24/7 ಸೇವೆ ಒದಗಿಸಲು 2-3 ತಿಂಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಶಿರಹಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನತೆಯ ಬಹು ವರ್ಷಗಳ ಕನಸು ಸಾಕಾರಗೊಳ್ಳುತ್ತಿದೆ. ನಾನು ಕೋವಿಡ್ ಸಮಯದಲ್ಲಿ ಮಾಡಿದ ಸೇವೆಯನ್ನು ಪರಿಗಣಿಸಿ ಜನತೆ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಭೂಮಿ ಖರೀದಿ ಪ್ರಕ್ರಿಯೆಯಲ್ಲೂ ನಾನು ಭಾಗಿಯಾಗಿದ್ದೆ, ಇದೀಗ ಅಡಿಗಲ್ಲು ಸಮಾರಂಭದಲ್ಲೂ ಭಾಗಿಯಾಗಿದ್ದು ನನ್ನ ಸೌಭಾಗ್ಯ. ಬೆಳ್ಳಟ್ಟಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ, 2 ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕಾಸ್ಪತ್ರೆ ಸ್ಥಳಾಂತರವಾದ ನಂತರ ಅಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು 3 ತಾಲೂಕಿನಲ್ಲಿಯ ಆಸ್ಪತ್ರೆಗಳಿಗೆ ಸಿಬ್ಬಂದಿಗಳಿಗೆ ಕ್ವಾರ್ಟರ್ಸ್ ನಿರ್ಮಾಣವಾಗಲು ಸಚಿವ ದಿನೇಶ ಗುಂಡೂರಾವ್ ಅವರು ಅನುದಾನ ಕಲ್ಪಿಸಬೇಕೆಂದು ವಿನಂತಿಸಿದರು.

ಮಾಜಿ ಸಂಸದ ಐ.ಜಿ. ಸನದಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಪ.ಪಂ ಅಧ್ಯಕ್ಷೆ ದೇವಕ್ಕ ಗುಡಿಮನಿ, ಡಿಸಿ ಸಿ.ಎನ್. ಶ್ರೀಧರ್, ಸಿಇಓ ಭರತ್ ಎಸ್, ಎಸ್‌ಪಿ ರೋಹನ್ ಜಗದೀಶ್, ಅಶೋಕ ಮಂದಾಲಿ, ಕೆಪಿಸಿಸಿ ಪ್ರ.ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಎಚ್.ಡಿ. ಮಾಗಡಿ, ನಾಗರಾಜ ಲಕ್ಕುಂಡಿ, ಆನಂದ ಗಡ್ಡದೇವರಮಠ, ಜಾನು ಲಮಾಣಿ, ಫಕ್ಕೀರೇಶ ರಟ್ಟಿಹಳ್ಳಿ, ಚಾಂದಸಾಬ ಮುಳಗುಂದ, ಗುರುನಾಥ ದಾನಪ್ಪನವರ, ಹೊನ್ನಪ್ಪ ಶಿರಹಟ್ಟಿ, ಅಶ್ರತ ಢಾಲಾಯತ, ಬಿ.ಬಿ.ಅಸೂಟಿ, ವೀರಯ್ಯ ಮಠಪತಿ, ಜಾನು ಲಮಾಣಿ, ಮಹೇಂದ್ರ ಮುಂಡವಾಡ, ಅಜ್ಜು ಪಾಟೀಲ, ಡಿ.ಕೆ. ಹೊನ್ನಪ್ಪನವರ, ವಿರೂಪಾಕ್ಷ ನಂದೆಣ್ಣವರ, ದೇವಪ್ಪ ಲಮಾಣಿ, ಡಿಎಚ್‌ಓ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ, ಡಾ. ಸುಭಾಸ್ ದೈಗೊಂಡ, ಮುತ್ತುರಾಜ ಭಾವಿಮನಿ, ತಹಸೀಲ್ದಾರ ರಾಘವೇಂದ್ರ ರಾವ್, ಇಓ ಆರ್.ವಿ. ದೊಡ್ಡಮನಿ, ಸಿಪಿಐ ನಾಗರಾಜ ಮಾಢಳ್ಳಿ, ಪಿಎಸ್‌ಐ ಚನ್ನಯ್ಯ ದೇವೂರ, ತಿಮ್ಮರಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ, ಮಹೇಶ ಬಡ್ನಿ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯದ ಜನತೆಗೆ ಆರೋಗ್ಯ ಸೇವೆಯಲ್ಲಿ ಯಾವುದೇ ಪಕ್ಷಪಾತ ಮಾಡುತ್ತಿಲ್ಲ. ರಾಜ್ಯದಲ್ಲಿಯ ಹಳೆ ತಾಲೂಕುಗಳಲ್ಲಿ 100 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಪ್ರಥಮ ಆದ್ಯತೆಯನ್ನು ನೀಡುವುದಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರಿಂದ ಅನುಮೋದನೆ ಪಡೆದು ಜಿಲ್ಲಾಸ್ಪತ್ರೆಯಲ್ಲಿ ಸಿಗುವಂತಹ ಎಲ್ಲ ಸೌಲಭ್ಯಗಳು ತಾಲೂಕಾ ಆಸ್ಪತ್ರೆಯಲ್ಲಿಯೂ ಸಿಗುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ನೇರವಾಗಿ ಅನುಕೂಲ ಕಲ್ಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

“ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಕಾಲದಿಂದಲೇ ಕಾಂಗ್ರೆಸ್ ಪಕ್ಷ ಗರೀಬಿ ಹಠಾವೋ ಯೋಜನೆ ಮೂಲಕ ಬಡವರ ಶ್ರೇಯೋಭಿವೃದ್ಧಿಗೆ ಹಲವಾರು ಕ್ರಾಂತಿಕಾರಕ ನಿರ್ಣಯಗಳನ್ನು ತೆಗೆದುಕೊಂಡು, ಯೋಜನೆಗಳನ್ನು ಜಾರಿಗೊಳಿಸಿ, ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಬಡತನ ಮುಕ್ತ ಸಮಾಜ ನಿರ್ಮಾಣಕ್ಕೆ ಆದ್ಯತೆ ನೀಡಿದೆ”

– ಎಚ್.ಕೆ. ಪಾಟೀಲ.

ಜಿಲ್ಲಾ ಉಸ್ತುವಾರಿ ಸಚಿವರು, ಗದಗ.


Spread the love

LEAVE A REPLY

Please enter your comment!
Please enter your name here