ನವದೆಹಲಿ: ಗೋವಾ ಸಿಎಂ ವೈಯಕ್ತಿಕ ಹೇಳಿಕೆಗೆ ರಾಜಕೀಯ ಬಣ್ಣ ಹಚ್ಚಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಪ್ರೀಂ ಕೋರ್ಟ್ನಲ್ಲಿ ಇನ್ನೂ ಇತ್ಯರ್ಥವಾಗದೆ ವಾದ, ಪ್ರತಿವಾದ ನಡೆಯುತ್ತಿರುವ ಈ ಸಂದರ್ಭದಲ್ಲಿ ಗೋವಾ ರಾಜ್ಯದ ಮುಖ್ಯಮಂತ್ರಿ ಅವರ ವೈಯಕ್ತಿಕ ಹೇಳಿಕೆಗೆ ರಾಜಕೀಯ ಬಣ್ಣ ಹಚ್ಚಬೇಡಿ.
ಕೇಂದ್ರ ಸರ್ಕಾರ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವತ್ತೂ ರಾಜಕೀಯ ಮಾಡುವುದಿಲ್ಲ. ಮೂರು ರಾಜ್ಯಗಳಿಗೆ ಹೊಂದಿಕೆಯಾಗುವಂತೆ ಅದರಲ್ಲೂ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆಗೆ ಯಾವತ್ತೂ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದು ಹೇಳಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದಗೊಂಡಿದೆ. ಈ ವಿಚಾರದಲ್ಲಿ ನಾನೂ ಸಹ ಕೇಂದ್ರ ಜಲಶಕ್ತಿ ಮಂತ್ರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡುತ್ತೇನೆ. ಕರ್ನಾಟಕದ ಹಿತಾಸಕ್ತಿ ಕಾಪಾಡಲು ಅವರು ಈ ವಿಚಾರದಲ್ಲಿ ನಿಷ್ಪಕ್ಷಪಾತವಾಗಿದ್ದಾರೆ” ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.



