ಬೆಂಗಳೂರು:- ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್ನಲ್ಲಿ ಚುನಾವಣೆ ನಡೆಸುತ್ತೇವೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.
ನವೆಂಬರ್ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಅಗತ್ಯವಿದ್ದರೆ ನವೆಂಬರ್ ಒಳಗೂ ಪ್ರಕ್ರಿಯೆ ಮುಗಿಸಲಾಗುವುದು. ವಾರ್ಡ್ ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಅಂತ್ಯಗೊಳಿಸಲಾಗುವುದು ಎಂದು ಸುಪ್ರೀಂಕೋರ್ಟ್ಗೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ.
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಅಷ್ಟರಲ್ಲಿ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದೆ.
ಬಿಬಿಎಂಪಿ ವಾರ್ಡ್ ವಿಭಜನೆ, ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಒಳಗೊಂಡಿವೆ. ಕರ್ನಾಟಕ ಸರ್ಕಾರ ಸಲ್ಲಿರುವ ಅಫಿಡವಿಟ್ನಲ್ಲಿ, ನವೆಂಬರ್ ವೇಳೆಗೆ ಎಲ್ಲ ಪ್ರಕ್ರಿಯೆ ಮುಗಿಸುವುದಾಗಿ ಮಾಹಿತಿ ನೀಡಿದ್ದು, ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ಉಲ್ಲೇಖಿಸಲಾಗಿದೆ.